ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 2:39 IST
Last Updated 7 ಮಾರ್ಚ್ 2021, 2:39 IST
ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ದಾವಣಗೆರೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ದಾವಣಗೆರೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.   

ದಾವಣಗೆರೆ: ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

‘ಪರಿಶಿಷ್ಟ ಜಾತಿಗೆ ನೀಡಲಾದ ಶೇ 15‌ರಷ್ಟು ಮೀಸಲಾತಿ 101 ಅಸ್ಪಶ್ಯ ಜಾತಿಗಳ ನಡುವೆ ಸಮಾನವಾಗಿ ಹಂಚಿಕೆಯಾಗಿಲ್ಲ. ಸೌಲಭ್ಯಗಳಿಂದ ವಂಚಿತವಾದ ಉಪಜಾತಿಗಳು ಹಿಂದುಳಿದಿವೆ ಎಂದು ಪ್ರತಿಭಟನಕಾರರು ತಿಳಿಸಿದರು.

‘ಸದಾಶಿವ ಆಯೋಗ 2012ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತು. ಇದುವರೆಗೂ ಅದು ಅನುಷ್ಠಾನಕ್ಕೆ ಬಂದಿಲ್ಲ. 3 ದಶಕಗಳಿಂದ ನಿರಂತರ ಹೋರಾಟ ನಡೆಯುತ್ತ ಬಂದಿದ್ದರೂ ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯ ಸರ್ಕಾರ ಮೀಸಲಾತಿಯನ್ನು ಶೇ 50ರಿಂದ 70ಕ್ಕೆ ಏರಿಸಿ, ಪರಿಶಿಷ್ಟ ಮೀಸಲಾತಿಯನ್ನು ಶೇ 25ಕ್ಕೆ ಹೆಚ್ಚಿಸಿ ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು. ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅನ್ಯ ಯೋಜನೆಗೆ ಬಳಸುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಜನಸಂಖ್ಯೆ ಆಧರಿಸಿ ಅವರ ಅಭಿವೃದ್ಧಿಗೆ ಹೆಚ್ಚು ಹಣ ನಿಗದಿ ಮಾಡಬೇಕು’ ಎಂದು ಒತ್ತಾಯಿಸಿದರು.

ಹಿಂದುಳಿದ ಆಯೋಗದ ಕಾಂತ್‌ರಾಜ್ ವರದಿಯನ್ನು ಬಹಿರಂಗಗೊಳಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆಯಿಂದ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಎನ್. ಮಲ್ಲೇಶ್ ಕುಕ್ಕುವಾಡ, ಮುಖಂಡರಾದ ಎಲ್.ಎಂ. ಹನುಮಂತಪ್ಪ, ಸಿ. ಬಸವರಾಜ್, ತಮ್ಮಣ್ಣ, ಡಿ.ಜಿ. ಆಸಿಫ್ ಅಲಿ, ಬಸವರಾಜ್ ಬಸಾಪುರ, ಪುಟ್ಟಾನಾಯ್ಕ, ರುದ್ರಮುನಿ, ಪಿ. ಯಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.