ಚನ್ನಗಿರಿ: ತಾಲ್ಲೂಕು ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಶಿಕ್ಷಕರನ್ನು ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮದ ಶಾಲೆಯ ಆವರಣದಲ್ಲಿ ಬುಧವಾರ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
‘ಈ ಶಾಲೆಯಲ್ಲಿ ಒಟ್ಟು 75 ವಿದ್ಯಾರ್ಥಿಗಳು ಇದ್ದು, 75 ವಿದ್ಯಾರ್ಥಿಗಳು ಒಬ್ಬ ಮುಖ್ಯಶಿಕ್ಷಕ ಹಾಗೂ ಶಿಕ್ಷಕರು ಮಾತ್ರ ಇದ್ದಾರೆ. ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನಾಂಗದವರೇ ಹೆಚ್ಚಾಗಿದ್ದಾರೆ. ನಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವಷ್ಟು ಹಣ ನಮ್ಮಲ್ಲಿ ಇಲ್ಲ. ಈ ಶಾಲೆಯಲ್ಲಿ 75 ವಿದ್ಯಾರ್ಥಿಗಳಿಗೆ ಇಬ್ಬರು ಶಿಕ್ಷಕರು ಮಾತ್ರ ಇದ್ದಾರೆ. ಇದರಲ್ಲಿ ಮುಖ್ಯ ಶಿಕ್ಷಕರು ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಹಾಗೂ ಸಭೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹೋಗಬೇಕಾಗುತ್ತದೆ. ಇರುವ ಒಬ್ಬ ಶಿಕ್ಷಕ ಎಲ್ಲ ತರಗತಿಯ ಮಕ್ಕಳಿಗೂ ಪಾಠ ಮಾಡಲು ಸಾಧ್ಯವಾಗುತ್ತದೆಯೇ? ಶಿಕ್ಷಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸದ ಮಟ್ಟ ಕುಸಿಯುತ್ತಿದೆ’ ಎಂದು ದೂರಿದರು.
‘ಈಗಾಗಲೇ ಹಲವಾರು ಬಾರಿ ಹೆಚ್ಚುವರಿ ಶಿಕ್ಷಕರನ್ನು ಈ ಶಾಲೆಗೆ ನೇಮಕ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜೂನ್ ತಿಂಗಳು ಮುಗಿಯುತ್ತಾ ಬಂದರೂ ಶಿಕ್ಷಕರ ನೇಮಕಾತಿ ಆಗುತ್ತಿಲ್ಲ. ಕೂಡಲೇ ಶಾಲೆಗೆ ಮೂವರು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡಬೇಕು. ನಮ್ಮ ಬೇಡಿಕೆಯನ್ನು ಈಡೇರಿಸದೇ ಹೋದರೇ ಚನ್ನಗಿರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಎದುರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಪೋಷಕರು ತಿಳಿಸಿದರು.
ಪೋಷಕರಾದ ಆಂಜನಪ್ಪ, ರಾಜಣ್ಣ, ಚನ್ನಬಸಪ್ಪ, ನಾಗರಾಜ್, ಯೋಗರಾಜ್, ಚಂದ್ರಶೇಖರ್, ಸಿದ್ದಪ್ಪ, ಚಂದ್ರಪ್ಪ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.