ADVERTISEMENT

‘ಕೋಳಿ ಮರಿಗಳನ್ನು ಪರೀಕ್ಷೆಗೆ ಒಳಪಡಿಸಿ‘

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 6:14 IST
Last Updated 8 ಜನವರಿ 2021, 6:14 IST

ದಾವಣಗೆರೆ:ಕೋಳಿ ಶೀತ ಜ್ವರದ ರೋಗ ಹರಡುತ್ತಿರುವ ಕಾರಣ ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ಕೋಳಿ ಮರಿಗಳನ್ನು ರ‍್ಯಾಂಡಂ ಪರೀಕ್ಷೆಗೆ ಒಳಪಡಿಸುವಂತೆ ಕೋಳಿ ಸರಬರಾಜು ಮಾಡುವ ಕಂಪನಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಾಪುರ ದೇವರಾಜ್ ಒತ್ತಾಯಿಸಿದರು.

‘ಜಿಲ್ಲೆಗೆ ಕೇರಳ, ತಮಿಳುನಾಡು, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಂದ ಕೋಳಿ ಮರಿಗಳು ಬರುತ್ತವೆ. ಈಗಾಗಲೇ ಕೇರಳ ಮತ್ತು ತಮಿಳುನಾಡಿನಲ್ಲಿ ಕೋಳಿ ಶೀತ ಜ್ವರ ಹೆಚ್ಚಾಗಿ ಹರಡುತ್ತಿದೆ.ಅಲ್ಲಿಂದ ಬರುವ ಕೋಳಿ ಮರಿಗಳನ್ನು ಪರೀಕ್ಷೆಗೆ ಒಳಪಡಿಸಿ, ರೈತರಿಗೆ ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿ ಕಂಪನಿಗೆ ಸೂಚನೆ ನೀಡಬೇಕು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕೋಳಿ ಸಾಕಾಣಿಕೆದಾರರು ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಜಿಲ್ಲೆಯಲ್ಲಿ 650ಕ್ಕೂ ಹೆಚ್ಚು ಕೋಳಿ ಫಾರಂಗಳಿವೆ. ಹೊರ ಭಾಗದಿಂದ ಬರುವ ಕೋಳಿ ಮರಿಗಳಲ್ಲಿ ಈ ರೋಗ ಕಂಡು ಬಂದಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಕಿರುವ ಕೋಳಿಗೆ ರೋಗ ತಗುಲಿ ಸಂಕಷ್ಟ ಎದುರಾಗಲಿದೆ. ಎಂಟು ತಿಂಗಳ ಹಿಂದೆಯಷ್ಟೇ ಇಂತದ್ದೇ ರೋಗ ತಗುಲಿ 8.50 ಲಕ್ಷ ಕೋಳಿ ಮರಿಗಳನ್ನು ನಾಶ ಮಾಡಲಾಗಿದೆ. ಮತ್ತೆ ರೋಗ ಬಂದರೆ ಸಾಕಾಣಿಕೆದಾರರು ನಷ್ಟ ಅನುಭವಿಸಬೇಕಾಗುತ್ತದೆ. ಜಿಲ್ಲಾಧಿಕಾರಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಕೋಳಿ ಸಾಕಾಣಿಕೆದಾರರಾದ ಬನ್ನಿಕೋಡು ಅಭಿಷೇಕ್, ಕಲ್ಕೆರೆ ಮಂಜ‌ಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.