ದಾವಣಗೆರೆ: ‘ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಕ್ಕಾಗಿಯೇ ಸಾವರ್ಕರ್ ಹೆಸರಿನೊಂದಿಗೆ ‘ವೀರ’ ಎಂಬ ಪದ ಸೇರಿಕೊಂಡಿದೆ. ಇಂಥ ವಿಚಾರಗಳು ಸಿದ್ದರಾಮಯ್ಯ ಅವರಿಗೆ ಅರ್ಥವಾಗುವುದಿಲ್ಲವೇಕೆ’ ಎಂದು ಶಾಸಕ ಜಗದೀಶ ಶೆಟ್ಟರ್ ಪ್ರಶ್ನಿಸಿದರು.
‘ಕೇವಲ ಅಲ್ಪಸಂಖ್ಯಾತರ ಮತ ಪಡೆಯುವುದಕ್ಕಾಗಿ ಅವರು ಈ ರೀತಿ ಕೀಳು ಮಟ್ಟದ ಹೇಳಿಕೆ ನೀಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥದ್ದು. ಸಾವರ್ಕರ್ ಅವರಿಗೆ ಕರಿ ನೀರಿನ ಶಿಕ್ಷೆ ಏಕೆ ಆಯಿತು ಎಂಬ ಬಗ್ಗೆ ಹಾಗೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ’ ಎಂದು ಭಾನುವಾರ ಅವರು ಪ್ರತಿಕ್ರಿಯಿಸಿದರು.
‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಲಿಂಗಾಯತ ಧರ್ಮ ಒಡೆಯಲು ಹೋದರು. ದೊಡ್ಡ ಹೋರಾಟವನ್ನು ಮಾಡಿಸಿದರು. ಅದರ ಫಲವಾಗಿ ಚುನಾವಣೆಯಲ್ಲಿ ಸೋತರು. ರಂಭಾಪುರಿ ಶ್ರೀಗಳ ಎದುರು ಈ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದ ಅವರು, ನಂತರ ಇಲ್ಲ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ನಂಬುವಂತಹ ಪರಿಸ್ಥಿತಿಯಲ್ಲಿ ಇಲ್ಲ. ಅವರು ಬರೀ ಸುಳ್ಳು ಹೇಳುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.