ಬೆಂಗಳೂರು: ‘ಚುನಾವಣಾ ಅಕ್ರಮ ಎಸಗಿ ಗೆದ್ದಿರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಕುರಿತಂತೆ ದಾವಣಗೆರೆಯ ಕೆಟಿಜೆ ನಗರದ ಸುಭಾನ್ ಖಾನ್ ಬಿನ್ ಎಚ್.ಉಮರ್ ಖಾನ್ (58) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಪ್ರಭಾ ಮತ್ತು ಅವರ ಬೆಂಬಲಿಗರು ನಡೆಸಿರುವ ಕೃತ್ಯವನ್ನು ಚುನಾವಣಾ ಅಕ್ರಮ ಎನ್ನಲಾಗದು’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ತಿರಸ್ಕರಿಸಿ ಆದೇಶಿಸಿದೆ.
‘ಚುನಾವಣಾ ಅಕ್ರಮ ಎಸಗಿರುವ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಜನಪ್ರತಿನಿಧಿ ಕಾಯ್ದೆ–1951ರ ಕಲಂ 100 (1) (ಬಿ) ಅಡಿಯಲ್ಲಿ ಕಾನೂನು ಬಾಹಿರ ಎಂದು ಪರಿಗಣಿಸಿ ಅಸಿಂಧುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು. ಪ್ರಭಾ ಮಲ್ಲಿಕಾರ್ಜುನ್ ಪರ ಹೈಕೋರ್ಟ್ ವಕೀಲ ಪ್ರಶಾಂತ್ ಆರ್.ಗೌಡರ್ ವಾದ ಮಂಡಿಸಿದ್ದರು.
ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ಬಿಜೆಪಿಯ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರೂ ಪ್ರಭಾ ಆಯ್ಕೆಯನ್ನು ಪ್ರಶ್ನಿಸಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇದೇ ನ್ಯಾಯಪೀಠ ಬುಧವಾರ ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.