ದಾವಣಗೆರೆ: ‘ಮುಂಬರುವ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಪ್ರಚಾರ ಕಾರ್ಯ ಆರಂಭಿಸಲು ಪಕ್ಷದ ರಾಷ್ಟ್ರಾಧ್ಯಕ್ಷ ಅರವಿಂದ ಕೇಜ್ರಿವಾಲ್ ಫೆ.26ರಂದು ದಾವಣಗೆರೆಗೆ ಆಗಮಿಸಲಿದ್ದಾರೆ’ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್ ಹೇಳಿದರು.
‘ಮಧ್ಯಕರ್ನಾಟಕ ದಾವಣಗೆರೆಯಲ್ಲಿಯೇ ಪಕ್ಷದ ಪ್ರಚಾರ ಕಾರ್ಯಕ್ಕೆ ಕೇಜ್ರಿವಾಲ್ ಚಾಲನೆ ನೀಡಲಿದ್ದು, ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಶೀಘ್ರದಲ್ಲಿಯೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಲಾಗುವುದು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಾಫರ್ ಮೊಯಿದ್ದಿನ್ ಮಾತನಾಡಿ, ‘ದೇಶವನ್ನು ಭ್ರಷ್ಟಾಚಾರಮುಕ್ತ ಮಾಡುವ ಕನಸು ನಮ್ಮದು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಆಮ್ ಆದ್ಮಿಗೆ ಜನ ಬೆಂಬಲ ನೀಡುವ ಆಶಯವಿದೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಎಎಪಿಯಿಂದ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ನಡೆಸಲು ತೀರ್ಮಾನಿಸಿದ್ದು, ದಾವಣಗೆರೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೆಲವು ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳ ಕಣಕ್ಕಿಳಿಸಲು ಹುಡುಕಾಟ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
‘ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಆಡಳಿತವನ್ನು ಕಂಡು ರೋಸಿ ಹೋಗಿರುವ ಜನತೆ ಹೊಸತನ ಬಯಸುತ್ತಿದ್ದಾರೆ. ಜನಪರ ಆಡಳಿತ ನಡೆಸುವ ಪಕ್ಷಗಳಿಗೆ ಮಣೆ ಹಾಕಲು ತಯಾರಿದ್ದು ನಮ್ಮ ಎಎಪಿ ಪಕ್ಷದ ಕಡೆಗೂ ಸಕಾರಾತ್ಮಕವಾಗಿ ಬೆಂಬಲಕೊಡುತ್ತಿದ್ದಾರೆ’ ಎಂದು ಹೇಳಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರು ಬಸವಂತಪ್ಪ, ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ್, ಪದಾಧಿಕಾರಿಗಳಾದ ಸಿ.ಆರ್. ಅರುಣಕುಮಾರ್, ಎಸ್. ಆದಿಲ್ ಖಾನ್ ಸುದ್ದಿಗೋಷ್ಠಿಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.