ದಾವಣಗೆರೆ: ಜಿಲ್ಲೆಯಲ್ಲಿ ಇನ್ನೊಂದು ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಬಹುತೇಕ ಹೊನ್ನಾಳಿ ತಾಲ್ಲೂಕಿಗೆ ಮಂಜೂರಾಗುವ ಸಾಧ್ಯತೆ ಇದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.
ದಾವಣಗೆರೆ ತಾಲ್ಲೂಕು ಆವರಗೊಳ್ಳದಲ್ಲಿ ನಿರ್ಮಿಸಿರುವ ಕೇಂದ್ರೀಯ ವಿದ್ಯಾಲಯದ ಹೊಸ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರೀಯ ವಿದ್ಯಾಲಯಕ್ಕೆ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚಿದ್ದು, ಚನ್ನಗಿರಿ, ಹೊನ್ನಾಳಿ ತಾಲ್ಲೂಕುಗಳಲ್ಲಿ ತಲಾ ₹ 10 ಎಕರೆ ಜಾಗ ಗುರುತಿಸುವಿಕೆ ಕಾರ್ಯ ನಡೆದಿದೆ. ಆಯಾ ತಾಲ್ಲೂಕಿನ ಶಾಸಕರು ಈ ಬಗ್ಗೆ ಗಂಭೀರ ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಖಾತೆ ಸಚಿವರ ಜತೆ ಚರ್ಚೆ ನಡೆಸಲಾಗಿದೆ. ಅಂತಿಮವಾಗಿ ಹೊನ್ನಾಳಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಘೋಷಿಸಿದಂತೆ ಜಗಳೂರು ತಾಲ್ಲೂಕಿನಲ್ಲಿ ಏಕಲವ್ಯ ವಸತಿಯುತ ಶಾಲೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕಾಗಿ 25 ಎಕರೆ ಜಮೀನುಈಗಾಗಲೇ ಗುರುತಿಸಲಾಗಿದೆ. ಈಗ ಅದು ಮಂಜೂರು ಆಗುವ ಹಂತದಲ್ಲಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.