ADVERTISEMENT

ದಾವಣಗೆರೆ: ರೈತರ ಹತ್ಯೆ ಖಂಡಿಸಿ ಕಿಸಾನ್ ಕಾಂಗ್ರೆಸ್ ಪಂಜಿನ ಮೆರವಣಿಗೆ

ಕ್ಯಾಂಡಲ್ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಶ್ರದ್ಧಾಂಜಲಿ ಅರ್ಪಣೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 7:24 IST
Last Updated 5 ಅಕ್ಟೋಬರ್ 2021, 7:24 IST
ಉತ್ತರ ಪ್ರದೇಶದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಾರು ಹರಿಸಿ ರೈತರನ್ನು ಕೊಂದಿರುವುದನ್ನು ಖಂಡಿಸಿ ಕಿಸಾನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿಯಿಂದ ನಗರದ ಜಯದೇವ ವೃತ್ತದಲ್ಲಿ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು
ಉತ್ತರ ಪ್ರದೇಶದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಾರು ಹರಿಸಿ ರೈತರನ್ನು ಕೊಂದಿರುವುದನ್ನು ಖಂಡಿಸಿ ಕಿಸಾನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿಯಿಂದ ನಗರದ ಜಯದೇವ ವೃತ್ತದಲ್ಲಿ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು   

ದಾವಣಗೆರೆ: ಕೃಷಿ ಕಾನೂನು ರದ್ದತಿಗಾಗಿ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ಭೇಟಿ ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಾರು ಹರಿಸಿ ರೈತರನ್ನು ಕೊಂದಿರುವುದನ್ನು ಖಂಡಿಸಿ ಕಿಸಾನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿಯಿಂದ ನಗರದ ಜಯದೇವ ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಾವನ್ನಪ್ಪಿದ ರೈತರಿಗೆ ಕ್ಯಾಂಡಲ್‌ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ, ‘ಸಚಿವ ಅಜಯ್ ಮಿಶ್ರಾ ಅವರ ಪುತ್ರನ ಕಾರು ಹರಿಸಿ ನಾಲ್ವರು ರೈತರು ಸೇರಿ 8 ಮಂದಿಯನ್ನ ಕೊಲೆ ಮಾಡಲಾಗಿದೆ. ಈ ಘಟನೆ ದೇಶದ ಘೋರ ದುರಂತ. ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಅನ್ನದಾತರನ್ನ ಕೊಲೆ ಮಾಡಲಾಗಿದೆ. ಈ ಘಟನೆಯಿಂದ ಬಿಜೆಪಿಯು ರೈತ ವಿರೋಧಿ ಎಂಬುದು ಮತ್ತೆ ಸಾಬೀತಾಗಿದೆ. ದೇಶಕ್ಕೆ ಅನ್ನ ನೀಡುವ ರೈತರು ನ್ಯಾಯಕ್ಕಾಗಿ ಹೋರಾಟ ಮಾಡುವುದು ತಪ್ಪಾ ಎಂದು ಪ್ರಶ್ನಿಸಿದರು.

ADVERTISEMENT

ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಹೋದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯರಾದ ದೀಪಿಂದರ್ ಸಿಂಗ್ ಅವರನ್ನ ಬಂಧಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮುಖಂಡರಾದ ಕೆ. ಚಮನ್‌ಸಾಬ್‌, ಕೆ.ಎಸ್‌. ಬಸವಂತಪ್ಪ, ಕೆ.ಜಿ. ಶಿವಕುಮಾರ್, ಅಣಜಿ ಚಂದ್ರಶೇಖರ್‌, ಎ. ನಾಗರಾಜ್, ಪ್ರವೀಣ್ ಕುಮಾರ್ ಎಸ್.ಕೆ., ಜಿಕ್ರಿಯಾ, ಹಾಲೇಶ್ ಬಸವನಾಳು, ಸುರೇಶ್ ಜಾಧವ್, ಮಾಲತೇಶ್‌ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.