
ಕೋಡಿಹಳ್ಳಿ ಚಂದ್ರಶೇಖರ್
ದಾವಣಗೆರೆ: ‘ರಾಜ್ಯ ಸರ್ಕಾರ ₹10 ಸಾವಿರ ಕೋಟಿ ಮೊತ್ತದ ಆವರ್ತ ನಿಧಿ ಹಾಗೂ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಮೊತ್ತದ ಆವರ್ತ ನಿಧಿ ಸ್ಥಾಪಿಸಬೇಕು. ಇದನ್ನು ಬೆಂಬಲ ಬೆಲೆ ಯೋಜನೆ (ಎಂಎಸ್ಪಿ) ಜಾರಿಗೆ ಬಳಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.
‘ಈಗಾಗಲೇ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿರುವ ರೈತರಿಗೂ ಮಾರುಕಟ್ಟೆ ಮಧ್ಯಪ್ರವೇಶ ದರ (ಎಂಐಪಿ) ಯೋಜನೆಯಡಿ ಆರ್ಥಿಕ ನೆರವು ನೀಡಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ದೇಶದ ಆರ್ಥಿಕತೆ ಸದೃಢವಾಗಿರುವುದಾಗಿ ಸುಳ್ಳು ಹಬ್ಬಿಸಲಾಗುತ್ತಿದೆ. ರೂಪಾಯಿ ಮೌಲ್ಯ ತೀವ್ರ ಕುಸಿದಿದೆ. ಆದರೆ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಆರ್ಥಿಕ ತಜ್ಞರು ಜನರಿಗೆ ವಾಸ್ತವ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸುತ್ತಿಲ್ಲ. ಜಿಡಿಪಿ ಬೆಳವಣಿಗೆ ಹೆಚ್ಚಾಗಿರುವುದಾಗಿ ನಂಬಿಸಲಾಗುತ್ತಿದೆ’ ಎಂದು ದೂರಿದರು.
‘ಕೆಲವೇ ಉದ್ಯಮಿಗಳ ಶ್ರೀಮಂತಿಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಸಾಲವನ್ನು ರೈಟ್ಆಫ್ ಮಾಡಿದೆ. ಆದರೆ, ಜನರ ತೆರಿಗೆ ಹಣದಲ್ಲಿ ₹200 ಲಕ್ಷ ಕೋಟಿ ಸಾಲಕ್ಕೆ ಬಡ್ಡಿ ಕಟ್ಟುತ್ತಿದೆ’ ಎಂದು ಹೇಳಿದರು.
ರೈತ ಮುಖಂಡರಾದ ಚಂದ್ರಶೇ ಖರ ಜಮಖಂಡಿ, ಮಹದೇವಿ ಬೇವಿನಾಳಮಠ, ಅರುಣಕುಮಾರ್, ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ವಿಶ್ವನಾಥ್ ಹಾಗೂ ಇನ್ನಿತರರಿದ್ದರು.
ನವ ಕರ್ನಾಟಕ ನಿರ್ಮಾಣ ಆಂದೋಲನ ಹೋರಾಟ ವೇದಿಕೆಯಡಿ ಪರ್ಯಾಯ ರಾಜಕಾರಣಕ್ಕೆ ಮುಂದಾಗುತ್ತಿದ್ದೇವೆ. ದಲಿತ, ಕನ್ನಡಪರ, ಕಾರ್ಮಿಕ ಪರ ಸಂಘಟನೆಗಳ ಬೆಂಬಲದೊಂದಿಗೆ ಪ್ರಾದೇಶಿಕ ಪಕ್ಷ ಆರಂಭಿಸುತ್ತೇವೆಕೋಡಿಹಳ್ಳಿ ಚಂದ್ರಶೇಖರ್,ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.