ದಾವಣಗೆರೆ: ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ 7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಮಾಜದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಅ. 30 ರವರೆಗೆ ಹಮ್ಮಿಕೊಂಡಿರುವಧರಣಿ ದಾವಣಗೆರೆಯಲ್ಲಿ ಗುರುವಾರ ಆರಂಭವಾಯಿತು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜ, ತಾಲ್ಲೂಕು ನಾಯಕ ಸಮಾಜ, ಜಿಲ್ಲಾ ವಾಲ್ಮೀಕಿ ಯುವ ಘಟಕ, ಮಹಿಳಾ ಘಟಕ, ಪರಿಶಿಷ್ಟ ಜಾತಿ ನೌಕರರ ಸಂಘ ಸೇರಿ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರವವು ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡಿದೆ. ರಾಜ್ಯ ಸರ್ಕಾರವೂ ಮೀಸಲಾತಿ ಹೆಚ್ಚಿಸಬೇಕು. ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಅವಕಾಶ ಇದ್ದು, ಶೀಘ್ರ ಸಂಪುಟ ಸಭೆ ಕರೆದು ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಓಬಳಪ್ಪ, ಮುಖಂಡರಾದ ಬಿ. ವೀರಣ್ಣ, ಗುಮ್ಮನೂರು ಮಲ್ಲಿಕಾರ್ಜುನ, ವಿನಾಯಕ ಪೈಲ್ವಾನ್, ಹದಡಿ ಹಾಲೇಶಪ್ಪ, ಶ್ರೀನಿವಾಸ ದಾಸಕರಿಯಪ್ಪ, ಆಂಜನೇಯ ಗುರೂಜಿ, ಟಿ.ಜೆ. ಲಕ್ಷ್ಮಣ್ ಸೇರಿ ಸಮಾಜದವರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.