ದಾವಣಗೆರೆಯಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪರಮೇಶ್ವರ ಇದ್ದಾರೆ –ಪ್ರಜಾವಾಣಿ ಚಿತ್ರ
ದಾವಣಗೆರೆ: ಇಂಧನ, ಚಿನ್ನ–ಬೆಳ್ಳಿಯೂ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ನೀತಿಗಳೇ ಕಾರಣ. ಅಡುಗೆ ಅನಿಲದ ಬೆಲೆ ಏರಿಕೆಯಿಂದ ಗ್ರಾಮೀಣ ಪ್ರದೇಶದ ಜನರು ಮತ್ತೆ ಸೌದೆ ಒಲೆಗೆ ಮರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ₹ 1,356 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಅವರು ಮಾತನಾಡಿದರು.
‘ನರೇಂದ್ರ ಮೋದಿ 2014ರಲ್ಲಿ ಪ್ರಧಾನಿಯಾದಾಗ 10 ಗ್ರಾಂ ಚಿನ್ನದ ಬೆಲೆ ₹ 28,000 ಇತ್ತು. ಈಗ ಇದು ₹ 1 ಲಕ್ಷಕ್ಕೆ ಏರಿಕೆಯಾಗಿದೆ. ₹ 43,000 ಇದ್ದ 1 ಕೆ.ಜಿ. ಬೆಳ್ಳಿಯ ಬೆಲೆ ₹ 95 ಸಾವಿರಕ್ಕೆ ಹೆಚ್ಚಾಗಿದೆ. ₹ 416 ಇದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ₹ 875ಕ್ಕೆ ಏರಿಕೆಯಾಗಿದೆ. ಇದಕ್ಕೆ ಇದ್ದ ಸಬ್ಸಿಡಿ ರದ್ದುಪಡಿಸಿದ್ದರಿಂದ ಜನರು ಸೌಧೆ ಒಲೆಯತ್ತ ಹೊರಳಿದ್ದಾರೆ’ ಎಂದು ಹೇಳಿದರು.
‘ಕರ್ನಾಟಕಕ್ಕೆ ₹ 11,495 ಕೋಟಿ ನೀಡುವಂತೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಭದ್ರಾ ಮೇಲ್ದಂಡೆಗೆ ಘೋಷಣೆ ಮಾಡಿದ್ದ ₹ 5,300 ಕೋಟಿಯಲ್ಲಿ ಬಿಡಿಗಾಸು ಕೊಟ್ಟಿಲ್ಲ. ನಾನು ಯಾರ ವಿರುದ್ಧವೂ ಸುಳ್ಳು ಆರೋಪ ಮಾಡುವುದಿಲ್ಲ. ನಾನು ಹೇಳಿದ್ದು ಸುಳ್ಳಾದರೆ ಸಾರ್ವಜನಿಕ ಬದುಕಿನಲ್ಲಿ ಮುಂದುವರಿಯುವುದಿಲ್ಲ’ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಜರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇಂತಹ ಎದೆಯಲ್ಲಿ ಮನುಷ್ಯತ್ವ, ಕರುಣೆಯೂ ಇರಬೇಕುಸಿದ್ದರಾಮಯ್ಯ, ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.