
ದಾವಣಗೆರೆ: ಜಿಲ್ಲೆಯಲ್ಲಿ ಮೆಕ್ಕೆಜೋಳಕ್ಕೆ ಮಾರುಕಟ್ಟೆ ಮಧ್ಯಪ್ರವೇಶ ದರ ₹ 2,150 ನಿಗದಿಪಡಿಸಿರುವ ಜಿಲ್ಲಾಡಳಿತ, ಇದಕ್ಕಿಂತ ಕಡಿಮೆ ಬೆಲೆಗೆ ಖರೀದಿಯಾಗುವ ರೈತರಿಗೆ ವ್ಯಾತ್ಯಾಸದ ಮೊತ್ತವನ್ನು ನೆರವಿನ ರೂಪದಲ್ಲಿ ಪಾವತಿಸಲು ಮುಂದಾಗಿದೆ.
‘ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಮೆಕ್ಕೆಜೋಳ ₹1,900ರ ದರದಲ್ಲಿ ವಹಿವಾಟು ನಡೆಯುತ್ತಿರುವುದನ್ನು ಪರಿಗಣಿಸಿ ಮಾರುಕಟ್ಟೆ ಮಧ್ಯಪ್ರವೇಶ ದರ ನಿಗದಿಪಡಿಸಲಾಗಿದೆ. ಈ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿದ ರೈತರಿಗೆ ಹೆಚ್ಚುವರಿ ₹ 250ನ್ನು ಸರ್ಕಾರ ನೆರವಿನ ರೂಪದಲ್ಲಿ ಪಾವತಿಸಲಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕಜೋಳ ಮಾರಾಟ ಮಾಡಿದ ರೈತರಿಗೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.
‘ನಿಗದಿಪಡಿಸಿರುವ ಮಧ್ಯಪ್ರವೇಶ ದರಕ್ಕಿಂತ ಕಡಿಮೆ ಬೆಲೆಗೆ ಮೆಕ್ಕೆಜೋಳ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು. ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಯೋಜನೆಯ ಪ್ರತಿಫಲ ಸಿಗದು. ರೈತರಿಂದ ಪ್ರತಿ ಎಕರೆಗೆ 12 ಕ್ವಿಂಟಲ್ಗಳಂತೆ ಗರಿಷ್ಠ 50 ಕ್ವಿಂಟಲ್ಗೆ ಮಾತ್ರ ವ್ಯಾತ್ಯಾಸದ ದರವನ್ನು ಪರಿಗಣಿಸಲಾಗುವುದು’ ಎಂದು ವಿವರಿಸಿದರು.
‘ಸರಾಸರಿ ದರಕ್ಕಿಂತ ಕಡಿಮೆ ಬೆಲೆಗೆ ವಹಿವಾಟು ನಡೆಯುತ್ತಿರುವುದರಿಂದ ಮೆಕ್ಕಜೋಳ ನೋಂದಣಿ ಕಾರ್ಯವನ್ನು ಪಿಡಿಎಸ್ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ ಮತ್ತು ಜಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಗರಿಷ್ಠ 2.38 ಲಕ್ಷ ಕ್ವಿಂಟಲ್ ವಹಿವಾಟಿಗೆ ವ್ಯತ್ಯಾಸದ ದರ ಪಾವತಿ ಮಾಡಲಾಗುತ್ತದೆ’ ಎಂದರು.
‘ಎಥೆನಾಲ್ ಉತ್ಪಾದನಾ ಘಟಕ ಹಾಗೂ ಕುಕ್ಕುಟೋದ್ಯಮ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಮೆಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಈ ಯೋಜನೆ ಅನ್ವಯಿಸದು. ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷ, ದುರುಪಯೋಗ ಆಗದ ರೀತಿಯಲ್ಲಿ ತಂಡವನ್ನು ರಚಿಸಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.