ADVERTISEMENT

ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ: ಪ್ರಭು ಬಡಿಗೇರ್

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 15:57 IST
Last Updated 16 ನವೆಂಬರ್ 2019, 15:57 IST
ಪ್ರಭು.ಎನ್.ಬಡಿಗೇರ್
ಪ್ರಭು.ಎನ್.ಬಡಿಗೇರ್   

ದಾವಣಗೆರೆ: ಅನಕ್ಷರಸ್ಥರು, ದೌರ್ಜನ್ಯಕ್ಕೊಳಗಾದ ಮಕ್ಕಳು, ಮಹಿಳೆಯರು ಸೇರಿ ಜನಸಾಮಾನ್ಯರಿಗೆ ಕಾನೂನಿನ ಕುರಿತು ಅರಿವು ಮೂಡಿಸುವುದು, ಅವರಿಗೆ ನ್ಯಾಯ ಒದಗಿಸುವುದು ಪ್ರಾಧಿಕಾರದ ಉದ್ದೇಶ ಎಂದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡಿಗೇರ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರ್.ಎಲ್. ಕಾನೂನು ಕಾಲೇಜು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆರ್.ಎಲ್.ಕಾನೂನು ಕಾಲೇಜಿನ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಶನಿವಾರ ಕಾನೂನು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ನೆಲದ ಕಾನೂನು, ಆಡಳಿತ ವ್ಯವಸ್ಥೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಹಾಗೂ ಅಗತ್ಯವಿದ್ದವರಿಗೆ ಕಾನೂನಿನ ನೆರವು ನೀಡುವುದು ನಮ್ಮ ಕಾನೂನು ಸೇವಾ ಪ್ರಾಧಿಕಾರದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ನ.9ರಂದು ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಆಚರಿಸಲಾಗುವುದು’ ಎಂದರು.

ADVERTISEMENT

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣ್‌ಕುಮಾರ್, ‘ಗ್ರಾಮೀಣ ಭಾಗದ ಜನರಲ್ಲಿ ಹಾಗೂ ಬಡ ವರ್ಗದ ಜನರಿಗೆ ಕಾನೂನಿನ ಬಗ್ಗೆ ಮತ್ತು ಅವರ ಮೂಲಭೂತ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಜನ ಜಾಗೃತರಾದರೆ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಲು ಸಹಾಯಕವಾಗುತ್ತದೆ’ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆರ್.ಎಲ್.ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್.ರೆಡ್ಡಿ, ‘ಸಂವಿಧಾನ ರಚನೆಯಾಗಿ 70 ವರ್ಷಗಳಾದರೂ ಜನರಿಗೆ ನ್ಯಾಯ ಒದಗಿಸಲಾಗಿಲ್ಲ. ಸಂವಿಧಾನದ ಮೂಲ ಉದ್ದೇಶ ಮತ್ತು ಗುರಿಯನ್ನು ನೆರವೇರಿಸಬೇಕಾದರೆ ಜನರಿಗೆ ಎಲ್ಲ ರೀತಿಯ ಹಕ್ಕುಗಳು ದೊರೆಯಬೇಕು’ ಎಂದು ಹೇಳಿದರು.

ಬಾಗಲಕೋಟೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಸಿದ್ದನಗೌಡ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್ ವಕೀಲರು, ಆರ್‌ಎಲ್ ಕಾನೂನು ಕಾಲೇಜಿನ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.