ಹರಿಹರ: ‘ನಗರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ನನ್ನ ಹಾಗೂ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ’ ಎಂದು ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದರು.
ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಶನಿವಾರ ಭಾಗವಹಿಸಿ ಅವರು ಮಾತನಾಡಿದರು.
ದಾವಣಗೆರೆ-ಹರಿಹರ ಅವಳಿ ನಗರಗಳಾಗಿದ್ದು, ಸರ್ಕಾರ, ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮೂಲಕ ತಾಲ್ಲೂಕಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಳೆದ ವಿಧಾನ ಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ತಾಲ್ಲೂಕಿನಲ್ಲಿ ಸರ್ಕಾರಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿತ್ತು ಎಂದರು.
‘ವೈದ್ಯಕೀಯ ಕಾಲೇಜು ಹೋರಾಟ
ದಲ್ಲಿ ಎಲ್ಲಾ ಪಕ್ಷದ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಪಕ್ಷದ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ತರುತ್ತೇನೆ’ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ದಾವಣಗೆರೆ ಚೀಗಟೇರಿ ಆಸ್ಪತ್ರೆಯ ಉನ್ನತ್ತೀಕರಣ ಕಾಮಗಾರಿಗೆ ಅನುಮೋದನೆ ದೊರೆತಿದೆ. ಜಿಲ್ಲೆಯ ಅಭಿವೃದ್ಧಿ ಕೇವಲ ದಾವಣಗೆರೆಗೆ ಕೇಂದ್ರೀಕೃತವಾಗಬಾರದು. ಅಭಿವೃದ್ದಿ ವಿಕೇಂದ್ರೀಕರಣವಾದಾಗ ಮಾತ್ರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು. ನಗರಸಭಾ ಸದಸ್ಯರಾದ ಎ. ವಾಮನ ಮೂರ್ತಿ, ಪಿ.ಎನ್. ವಿರೂಪಾಕ್ಷ, ಮುಜಾಮಿಲ್, ಹೋರಾಟ ಸಮಿತಿಯ ಎನ್.ಎಚ್. ಶ್ರೀನಿವಾಸ್, ಎಚ್.ಕೆ. ಕೊಟ್ರಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.