ADVERTISEMENT

ಗವಿಮಠದ ಅಭಿವೃದ್ಧಿಗೆ ₹ 1.5 ಕೋಟಿ ಅನುದಾನ

ಗವಿಮಠಕ್ಕೆ ಕುಟುಂಬದೊಂದಿಗೆ ಭೇಟಿ ನೀಡಿ ಆಶಿರ್ವಾದ ಪಡೆದ ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 4:43 IST
Last Updated 20 ಜೂನ್ 2021, 4:43 IST
ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದಲ್ಲಿ ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ದಂಪತಿಗಳು ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಂದ  ಆಶೀರ್ವಾದ  ಪಡೆದರು.
ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದಲ್ಲಿ ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ದಂಪತಿಗಳು ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಂದ  ಆಶೀರ್ವಾದ  ಪಡೆದರು.   

ಜಗಳೂರು: ತಪೋಕ್ಷೇತ್ರ ಎನಿಸಿರುವ ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದ ಅಭಿವೃದ್ಧಿಗೆ ₹ 1.5 ಕೋಟಿ ಅನುದಾನ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು.

ತಾಲ್ಲೂಕಿನ ಕಣ್ವಕುಪ್ಪೆ ಗವಿಮಠಕ್ಕೆ ಶನಿವಾರ ಬೆಳಿಗ್ಗೆ ಕುಟುಂಬ ಸಮೇತರಾಗಿ ಬಂದು ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಮಾತನಾಡಿದರು.

‘ಕಣ್ವಕುಪ್ಪೆ ಶ್ರೀ ಅವರು ನಾಡಿನ ಜನರಿಗೆ ದೈವಭಕ್ತಿ ಮೂಡುವಂತೆ ಮಾಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಕ್ರಿಯಾಯೋಜನೆ ರೂಪಿಸಿ ಕೊಟ್ಟಲ್ಲಿ ಅನುದಾನ ಮಂಜೂರು ಮಾಡಲಾಗುವುದು. ಶಾಸಕ ಎಸ್.ವಿ. ರಾಮಚಂದ್ರ ಅವರು ಸರ್ಕಾರದ ಮಟ್ಟದಲ್ಲಿ ಹೆಚ್ಚು ಅನುದಾನವನ್ನು ತಂದು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ಶಾಸಕ ಎಸ್.ವಿ. ರಾಮಚಂದ್ರ, ‘ಕಣ್ವಕುಪ್ಪೆ ಗವಿಮಠವು ಈ ಭಾಗದ ಜನರಿಗೆ ಧಾರ್ಮಿಕ ಕ್ಷೇತ್ರವಾಗಿದೆ. ಆದರೆ, ಕಾಡಿನ ನಡುವೆ ಇರುವುದರಿಂದ ಕರಡಿ ಮತ್ತು ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಮಠಕ್ಕೆ ಬರುವ ಭಕ್ತರು ಭಯಪಡುತ್ತಾರೆ. ಮಠದ ಸುತ್ತಲೂ ತಂತಿಬೇಲಿ ಸೇರಿ ಅಭಿವೃದ್ಧಿಗೆ ಅನುದಾನ ನೀಡಬೇಕು’ ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪರ ನಾಯಕತ್ವ ಬದಲಾವಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಚಿವರು ನಿರಾಕರಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಸೊಕ್ಕೆ ನಾಗರಾಜ್, ಅಜಯ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.