ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಬುಧವಾರ ಬೆಳಿಗ್ಗೆ ನಗರ ಸುತ್ತಾಟ ನಡೆಸಿದರು.
ಕುಂದುವಾಡ ಕೆರೆಯ ಮುಖ್ಯ ದ್ವಾರದ ಬಳಿ ರಾಜಾ ಕಾಲುವೆಗೆ ನಿರ್ಮಿಸಲಾಗುತ್ತಿರುವ ಮಳೆ ನೀರು ಸರಾಗವಾಗಿ ಹೋಗುವ ಬ್ರಿಡ್ಜ್ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ಶೀಘ್ರದಲ್ಲಿ ಕಾಮಗಾರಿ ಮುಗಿಸಬೇಕು. ಕುಂದುವಾಡ ಕೆರೆ ಆವರಣಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಾಲಿಕೆ ಹಾಗೂ ಸ್ಮಾರ್ಟ್ಸಿಟಿ ಅಧಿಕಾರಿಗಳಿಗೆ ತಿಳಿಸಿದರು.
ಬಳಿಕ ಗಾಜಿನ ಮನೆಗೆ ಭೇಟಿ ನೀಡಿದರು. ಈಗಾಗಲೇ ಮಂಜೂರಾಗಿರುವ ₹ 5 ಕೋಟಿ ವೆಚ್ಚದಲ್ಲಿ ಗಾಜಿನ ಮನೆಯನ್ನು ಸುಂದರಗೊಳಿಸಲಾಗುವುದು. ಉದ್ಯಾನ ಹಾಗೂ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಗಾಜಿನಮನೆಯತ್ತ ಹೆಚ್ಚು ಪ್ರವಾಸಿಗರು ಬರುವಂತೆ ಮಾಡಬೇಕು ಎಂದು ತಿಳಿಸಿದರು.
ಎಂಸಿಸಿ ಬಿ ಬ್ಲಾಕ್ ಹಿರಿಯ ನಾಗರಿಕರ ಪಾರ್ಕ್ಗೆ ಭೇಟಿ ನೀಡಿ, ನಾಗರಿಕರೊಂದಿಗೆ ಸಂವಾದ ನಡೆಸಿದರು. ಪಾರ್ಕ್ನಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ಸೂಚಿಸಿದರು. ಪೌರಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿದರು.
ಬೂದಾಳು ರಸ್ತೆಯ ಪೌರ ಕಾರ್ಮಿಕರ ವಸತಿಗೃಹ ಕಾಲೊನಿಗೆ ಭೇಟಿ ನೀಡಿ, ನಿರ್ಮಾಣ ಹಂತದಲ್ಲಿರುವ ವಸತಿಗೃಹಗಳ ಕಾಮಗಾರಿಯನ್ನು ವೀಕ್ಷಿಸಿದರು. ತ್ವರಿತ ಗತಿಯಲ್ಲಿ ಕಾಮಗಾರಿ ಮುಗಿಸುವಂತೆ ತಿಳಿಸಿದರು. ನಂತರ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪಾಲಿಕೆ ಮೇಯರ್ ಬಿ.ಜಿ. ಅಜಯಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯೆ ರೇಖಾ ಸುರೇಶ್, ಎಸ್ಪಿ ಹನುಮಂತರಾಯ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಮಾರ್ಟ್ಸಿಟಿ ಎಂ.ಡಿ. ರವೀಂದ್ರ ಮಲ್ಲಾಪುರ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.