ADVERTISEMENT

ದಾವಣಗೆರೆ | ತಪ್ಪು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಮಲ್ಲಿಕಾರ್ಜುನ್‌

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 2:56 IST
Last Updated 2 ಫೆಬ್ರುವರಿ 2026, 2:56 IST
ಎಸ್‌.ಎಸ್‌. ಮಲ್ಲಿಕಾರ್ಜುನ್‌
ಎಸ್‌.ಎಸ್‌. ಮಲ್ಲಿಕಾರ್ಜುನ್‌   

ದಾವಣಗೆರೆ: ‘ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ನಾನು ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ. ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಿಳಿಸಿದರು.

ಕಾಂಗ್ರೆಸ್‌ ಮುಖಂಡ, ‘ಧೂಡಾ’ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್‌ ಪುತ್ರರು ಪೊಲೀಸರ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ ಸಚಿವರು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದರು.

‘ಹಲ್ಲೆಗೆ ಸಂಬಂಧಿಸಿದ ವಿಚಾರ ಗಮನಕ್ಕೆ ಬಂದಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಜೆಡಿಎಸ್ ಮುಖಂಡ ಜೆ. ಅಮಾನುಲ್ಲಾ ಖಾನ್ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಆಯೂಬ್‌ ಪೈಲ್ವಾನ್‌ ಪುತ್ರರ ಸ್ನೇಹಿತನರ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿರಬಹುದು. ಇದಕ್ಕೂ ನನಗೂ ಸಂಬಂಧವಿಲ್ಲ. ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ. ಕಾನೂನಿಗೆ ಶ್ರೀಮಂತ, ಬಡವ ಎಂಬ ಭೇದವಿಲ್ಲ’ ಎಂದು ಹೇಳಿದರು.

‘ಮಾದಕವಸ್ತು ಜಾಲ ಪತ್ತೆಯಾದಾಗಲೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೆ. ಈ ಜಾಲದಲ್ಲಿ ಪತ್ತೆಯಾದವರನ್ನು ನನ್ನೊಂದಿಗೆ ತಳುಕುಹಾಕಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಾಗಿರುವ ನನಗೆ ಸಮಾಜದಲ್ಲಿ ಗೌರವವಿದೆ. ಬಿಜೆಪಿ ನಾಯಕರ ಆರೋಪಗಳಿಂದ ಬೇಸರವಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.