ಹೊನ್ನಾಳಿ: ಸಿಎಂ ಬದಲಾವಣೆ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೊ ನಕಲಿ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ನಮಗೆ ನಂಬಿಕೆ ಇದೆ. ಯಾರೋ ಇದನ್ನು ಸೃಷ್ಟಿ ಮಾಡಿದ್ದಾರೆ. ವೈರಲ್ ಆಗಿರುವ ಆಡಿಯೊ ಬಗ್ಗೆ ತನಿಖೆ ನಡೆಸಲಿ ಎಂದು ಸ್ವತಃ ನಳಿನ್ಕುಮಾರ್ ಕಟೀಲ್ ಅವರೇ ಹೇಳಿದ್ದಾರೆ. ತನಿಖೆ ನಡೆಯಲಿ’ ಎಂದು ಹೇಳಿದರು.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಿರಿಯ ಸಚಿವರಾದ ಕೆ.ಎಸ್. ಈಶ್ವರಪ್ಪ ಮತ್ತು ಜಗದೀಶ ಶೆಟ್ಟರ್ ಅವರನ್ನು ಅವರ ಸ್ಥಾನಗಳಿಂದ ತೆಗೆಯುವ ಬಗ್ಗೆ ಆಡಿಯೊದಲ್ಲಿರುವ ಧ್ವನಿ ಅವರದ್ದಲ್ಲ. ಕಾಂಗ್ರಸ್ನವರ ಕುತಂತ್ರ ಫಲಿಸುವುದಿಲ್ಲ’ ಎಂದು ಕಾಂಗ್ರಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.
ನೂತನ ಮುಖ್ಯಮಂತ್ರಿ ಘೋಷಣೆ ಕುರಿತ ಪ್ರಶ್ನೆಗೆ, ‘ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ಅವರೇ ಮುಂದಿನ ಎರಡು ವರ್ಷಗಳ ಅವಧಿಗೆ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಘೋಷಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ’ ಎಂದು ಸ್ಪಸ್ಟಪಡಿಸಿದರು. ಪುರಸಭಾಧ್ಯಕ್ಷ ಕೆ.ವಿ. ಶ್ರೀಧರ್. ಸುಮಾ ರೇಣುಕಾಚಾರ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.