
ಮರವಂಜಿ(ಚನ್ನಗಿರಿ): ‘ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ರಾಜ್ಯದ ಬೊಕ್ಕಸದ ಹಣವನ್ನು ಹಾಕಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ’ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ತಿಳಿಸಿದರು.
ಸೋಮವಾರ ಮರವಂಜಿ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ವಿಬಿ-ಜಿ ರಾಮ್ ಜಿ ಯೋಜನೆ ಅಡಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ. ಈ ಯೋಜನೆ ಅಡಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಶೇ 60 ಹಾಗೂ ರಾಜ್ಯ ಸರ್ಕಾರ ಶೇ 40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ ಈ ಯೋಜನೆಗೆ ರಾಜ್ಯದ ಪಾಲು ನೀಡಲು ಹಣ ಇಲ್ಲದೇ ಈ ಯೋಜನೆಯ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದೆ. ಈಗಾಗಲೇ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ಮೂರು ಅಥವಾ ನಾಲ್ಕು ತಿಂಗಳೊಳಗೆ ಚುನಾವಣೆ ನಡೆಸಬೇಕಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಕಂಡು ಜನ ಬೇಸತ್ತಿದ್ದಾರೆ. ಹಾಗಾಗಿ ಮುಂಬರುವ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಗೆದ್ದು, ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ. ಲಕ್ಷ್ಮಪ್ಪ, ಉಪಾಧ್ಯಕ್ಷೆ ಪುಟ್ಟಮ್ಮ, ಸದಸ್ಯರಾದ ಕೆ.ವಿ. ಸುರೇಶ್ ಕುಮಾರ್, ಹನುಮಂತಪ್ಪ, ಕೆ.ಪಿ. ಅಜ್ಜಪ್ಪ, ಎಂ. ಗೀತಮ್ಮ, ಜೀವನ್ ಕುಮಾರ್, ತಿಪ್ಪೇಸ್ವಾಮಿ, ಕಮಲಮ್ಮ, ರೂಪಾಬಾಯಿ, ರೇಷ್ಮಾಬಾಯಿ, ಸುನೀತಾ ಬಾಯಿ, ಪಿಡಿಓ ಹರೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.