ಹರಿಹರ:ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಜೂನ್ 22 ರಂದು ಜನಪ್ರತಿನಿಧಿಗಳ ನೇತೃತ್ವದಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದರು.
ತಾಲ್ಲೂಕಿನ ರಾಜನಹಳ್ಳಿ ಸಮೀಪದ 22 ಕೆರೆಗಳಿಗೆ ನೀರು ತುಂಬಿಸುವ ಜಾಕ್ವೆಲ್ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಾಕ್ವೆಲ್ ಆರಂಭಿಸುವ ಕಾರ್ಯಕ್ಕೆ ಜಿಲ್ಲಾ ಉಸ್ತುವರಿ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿ ದಿನಾಂಕ ನಿಗದಿಗೊಳಿಸಲಾಗಿದೆ. ಜಿಲ್ಲೆಯ ಕೆರೆಗಳಿಗೆ ಈ ಮುಂಗಾರು ಹಂಗಾಮಿನಲ್ಲಿ ಸಂಪೂರ್ಣ ನೀರು ತುಂಬಿಸಲಾಗುವುದು ಎಂದರು.
ಜಾಕ್ವೆಲ್ಗೆ ನೀರು ಹರಿದು ಬರುವ ಕಾಲುವೆ ಹೂಳು ತೆಗೆಸುವ ಜತೆಗೆ ಗಿಡಗಳನ್ನು ತೆರವುಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.ಜಾಕ್ವೆಲ್ ಸಮೀಪದ ನದಿ ಪಾತ್ರದಲ್ಲಿ ನೀರು ತಡೆಹಿಡಿಯಲು ಚೆಕ್ಡ್ಯಾಂ ಕಾರ್ಯ ಪ್ರಗತಿಯಲ್ಲಿದೆ. ನೀರು ಸರಾಗವಾಗಿ ತಲುಪಲು ಅಗತ್ಯ ಕ್ರಮ ಜರುಗಿಸಲಾಗಿದೆ. ಚಾಲನೆಗೂ ಮುನ್ನ ಪ್ರಾಯೋಗಿಕವಾಗಿ ನೀರು ಹರಿಸಿ ಪೈಪ್ಲೈನ್ಗಳ ಪರಿಶೀಲನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
‘ನದಿ ಪಾತ್ರದಲ್ಲಿ ಚೆಕ್ಡ್ಯಾಂ ನಿರ್ಮಾಣದಿಂದ ರೈತರ ಪಂಪ್ಸೆಟ್ಗಳು ಹಾಗೂ ಹೊಲಗಳು ಮುಳುಗುವ ಭೀತಿ ಎದುರಾಗುವ ಬಗ್ಗೆ ದೂರು ನೀಡಿದ್ದಾರೆ. ತಾಂತ್ರಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಜರುಗಿಸುತ್ತೇನೆ’ ಎಂದರು.
ಜಾಕ್ವೆಲ್ ಹೊಲಗಳನ್ನು ನೀಡಿರುವ ರೈತರ ಕುಟುಂಬದವರು ಈ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ನಿಗದಿತ ಸಮಯದಲ್ಲಿ ವೇತನ ನೀಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ನಿರಂತರ ವಿದ್ಯುತ್ ಸಂಪರ್ಕ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆರೆಗಳಿಗೆ ನೀರು ತಂಬಿಸುವುದರಿಂದ ಮಳೆಗಾಲದಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದ ನದಿ ನೀರಿನ ಸದ್ಬಳಕೆಯಾಗುವ ಜತೆಗೆ ಬರಗಾಲದಿಂದ ತತ್ತರಿಸುತ್ತಿರುವ ಗ್ರಾಮಗಳ ರೈತರ ಬದುಕು ಹಸನಾಗುತ್ತದೆ ಎಂದು ಹೇಳಿದರು.
ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಎಂಜಿನಿಯರ್ಗಳು ಹಾಗೂ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.