ದಾವಣಗೆರೆ: ಕೋವಿಡ್-19 ಸಂಭಾವ್ಯ 3ನೇ ಅಲೆ ನಿಯಂತ್ರಿಸುವ ಜೊತೆಗೆ ಡೆಂಗಿ, ಮಲೇರಿಯಾ, ಚಿಕೂನ್ಗುನ್ಯದಂಥ ಸಾಂಕ್ರಾಮಿಕ ರೋಗಗಳನ್ನೂ ಕೂಡ ನಿಯಂತ್ರಿಸಬೇಕು. ಅದಕ್ಕಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ದಾವಣಗೆರೆ ತಹಶೀಲ್ದಾರ್ ಬಿ.ಎನ್. ಗಿರೀಶ್ ಹೇಳಿದರು.
ಎಪಿಎಂಸಿ ಆವರಣದ ರೈತ ಭವನದಲ್ಲಿ ಮಂಗಳವಾರ ಏರ್ಪಡಿಸಿದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಮುಂಜಾಗ್ರತಾ ಸಭೆಯಲ್ಲಿ ಅವರು ಮಾತನಾಡಿದರು.
ಮಳೆಗಾಲ ಪ್ರಾರಂಭವಾಗಿರುವುದರಿಂದ ಸೊಳ್ಳೆಗಳಿಂದ ಕ್ರಾಮಿಕ ರೋಗಗಳು ಹರಡುತ್ತವೆ. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್, ‘ಸೊಳ್ಳೆಗಳಿಂದ ಮಲೇರಿಯಾ, ಡೆಂಗಿ, ಆನೆಕಾಲು, ಚಿಕೂನ್ಗುನ್ಯ ಹರಡುತ್ತದೆ. ಮಳೆಗಾಲದಲ್ಲಿ ತಗ್ಗುಪ್ರದೇಶ ಇನ್ನಿತರೆಡೆ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಈ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ನೀರಿನ ಸಂಗ್ರಹಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ಸೊಳ್ಳೆ ಕಡಿತದಿಂದ ಮುಕ್ತರಾಗಲು ಸೊಳ್ಳೆಪರದೆ, ಬೇವಿನ ಸೊಪ್ಪಿನ ಹೊಗೆ ಉಪಯೋಗಿಸಬೇಕು. ಮನೆಯ ಸುತ್ತ ಬಿಸಾಡಿದ ತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ಸಂಗ್ರಹ ಆಗದಂತೆ ಎಚ್ಚರವಹಿಸಬೇಕು’ ಎಂದು ವಿವರ ನೀಡಿದರು.
ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಡಾ. ಹರ್ಷ, ಪಾಲಿಕೆಯ ವೈದ್ಯಾಧಿಕಾರಿ ಡಾ. ಸುಧೀಂದ್ರ, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ತಂಬಾಕು ನಿಯಂತ್ರಣ ಬಗ್ಗೆ ತ್ರೈಮಾಸಿಕ ಸಭೆ ನಡೆಸಲಾಯಿತು. ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.