ದಾವಣಗೆರೆ: ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯುತ್ತಿರುವ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿದ್ಯಾನಗರ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಿಂದ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.
ಡೊಳ್ಳು ಕುಣಿತ, ವೀರಗಾಸೆ, ಕೀಲುಕುದುರೆ, ಮಕ್ಕಳ ಬ್ಯಾಂಡ್ಸೆಟ್ಗಳು ಮೆರವಣಿಗೆಗೆ ಮೆರುಗು ನೀಡಿತು. ಈ ಮೆರವಣಿಗೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಚಾಲನೆ ನೀಡಿದ್ದರು.
ಸಮ್ಮೇಳನದ ಸರ್ವಾಧ್ಯಕ್ಷ ಎನ್.ಟಿ. ಎರ್ರಿಸ್ವಾಮಿ ಸಾರೋಟು ಏರಲು ನಿರಾಕರಿಸಿದ್ದು, ಕನ್ನಡ ಭುವನೇಶ್ವರಿ ದೇವಿಯ ವಿಗ್ರಹದೊಂದಿಗೆ ಮೆರವಣಿಗೆಯಲ್ಲಿ ನಡೆದುಕೊಂಡು ಬಂದರು. ಅವರ ಪತ್ನಿ ಸಾವಿತ್ರಿ, ಮಕ್ಕಳು, ಮೊಮ್ಮಕ್ಕಳು,
ಕನ್ನಡ ಅಭಿಮಾನಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅವರೂ ಭಾಗವಹಿಸಿದ್ದರು.
ಸಂಜೆ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆ, ಜಿಪಿಜಿಎಂ ಪ್ರೌಢಶಾಲೆ, ಸೋಮೇಶ್ವರ ವಿದ್ಯಾಲಯ, ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ವಿನೂತನ ಮಹಿಳಾ ಸಮಾಜ, ಅನ್ಮೋಲ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರುದ್ರಾಕ್ಷಿಬಾಯಿ ಪುಟ್ಟನಾಯ್ಕ ತಂಡದಿಂದ ಲಂಬಾಣಿ ನೃತ್ಯ ನಡೆಯಿತು. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ. ಫಾಲಾಕ್ಷಿ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹನಿರ್ದೇಶಕ ರವಿಚಂದ್ರ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಬಿ.ಎನ್. ಗಿರೀಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.