ದಾವಣಗೆರೆ: ಮೇಕೆದಾಟು ಪಾದಯಾತ್ರೆ ಮಾಡಿದ ಕಾಂಗ್ರೆಸ್ ನಾಯಕರು ರಾಜ್ಯದ ಜನರಯ ಕ್ಷಮೆ ಯಾಚಿಸಬೇಕು ಎಂದು ಶಾಸಕ ರೇಣುಕಾಚಾರ್ಯ ಶನಿವಾರ ಅಬ್ಬರಿಸಿದ್ದರು. ಇಂದು ಅವರದೇ ಪಕ್ಷದ ಶಾಸಕ ಎಸ್.ವಿ. ರಾಮಚಂದ್ರ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಕೊರೊನಾ ನಿಯಮ, ವಾರಾಂತ್ಯ ಕರ್ಫ್ಯೂ ಬಿಜೆಪಿ ಶಾಸಕರಿಗೆ ಅನ್ವಯಿಸುವುದಿಲ್ಲವೇ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಅಧ್ಯಕ್ಷ ಕೆ.ಎಲ್. ಹರೀಶ್ ಬಸಾಪುರ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯದ ಜನರ ನೀರಿನ ಬವಣೆ ತೀರಿಸಲು,ಕೇಂದ್ರ ಸರ್ಕಾರದ ಗಮನ ಸೆಳೆಯಲು ಮೇಕೆದಾಟು ಯೋಜನೆಯ ಬಗ್ಗೆ ಪಾದಯಾತ್ರೆ ಮಾಡಿದ್ದಾರೆ. ಹೊರತು ಹುಟ್ಟುಹಬ್ಬ ಎಂದು ಮೋಜು ಮಾಡಿದ್ದಲ್ಲ. ರಾಜ್ಯದಲ್ಲಿ ಆಡಳಿತ ಪಕ್ಷಕ್ಕೆ ಒಂದು ಕಾನೂನು, ವಿರೋಧ ಪಕ್ಷ ಹಾಗೂ ಸಾರ್ವಜನಿಕರಿಗೆ ಒಂದು ಕಾನೂನು ಇದೆಯೇ ಎಂಬುದನ್ನು ರೇಣುಕಾಚಾರ್ಯರು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಾರಾಂತ್ಯ ಕರ್ಫ್ಯೂನಿಂದಾಗಿ ರೈತರು, ವ್ಯಾಪಾರಸ್ಥರು, ಮಧ್ಯಮವರ್ಗದವರು ದುಡಿಮೆ ಇಲ್ಲದೆ ತತ್ತರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರು ತಮ್ಮಿಷ್ಟದಂತೆ ನಡೆದುಕೊಂಡು ನಂತರ ರಾಜ್ಯದ ಜನರ ಕ್ಷಮೆಯಾಚಿಸುತ್ತೇವೆ ಎಂದು ಹೇಳುವುದನ್ನು ಬಿಡಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.