ADVERTISEMENT

ಎತ್ತರದ ಸೇತುವೆ ನಿರ್ಮಾಣಕ್ಕೆ ಆಗ್ರಹ

ಚನ್ನಗಿರಿ ತಾಲ್ಲೂಕಿನ ಕೆಂಗಾಪುರ- ದೊಡ್ಡಘಟ್ಟ ಸೇತುವೆಯ ಮೇಲೆ ನೀರು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 6:21 IST
Last Updated 25 ಅಕ್ಟೋಬರ್ 2021, 6:21 IST
ಚನ್ನಗಿರಿ ತಾಲ್ಲೂಕಿನ ಕೆಂಗಾಪುರ- ದೊಡ್ಡಘಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಚನ್ನಗಿರಿ ತಾಲ್ಲೂಕಿನ ಕೆಂಗಾಪುರ- ದೊಡ್ಡಘಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.   

ಚನ್ನಗಿರಿ: ತಾಲ್ಲೂಕಿನ ಕೆಂಗಾಪುರ- ದೊಡ್ಡಘಟ್ಟ ಗ್ರಾಮಗಳ ಮಧ್ಯೆ ಇರುವ ನೆಲಮಟ್ಟದ ಸೇತುವೆ ಶನಿವಾರ ಬಿದ್ದ ಭಾರಿ ಮಳೆಗೆ ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಪ್ರತಿ ಮಳೆಗಾಲದಲ್ಲೂ ಈ ಸೇತುವೆಯ ಮೇಲೆ ಮಳೆಯ ನೀರು ಹರಿದು ವಾಹನಗಳ ಸಂಚಾರಕ್ಕೆ ಅಡ್ಡಿ
ಯಾಗುತ್ತಿದೆ. ಎತ್ತರದ ಸೇತುವೆ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೆಂಗಾಪುರ- ದೊಡ್ಡಘಟ್ಟ ಸಂಪರ್ಕ ಸೇತುವೆಯ ಮೂಲಕ ಪ್ರತಿ ದಿನ ನೂರಾರು ವಾಹನಗಳು ಸಂಚರಿಸುತ್ತವೆ. ಮಳೆಗಾಲದಲ್ಲಿ ಇಲ್ಲಿನ ಹಳ್ಳ ಮೈದುಂಬಿ ಹರಿದು ಸೇತುವೆಯ ಮೇಲೆ 5ರಿಂದ 6 ಅಡಿಗಳಷ್ಟು ನೀರು ಹರಿಯುತ್ತದೆ. ಪರಿಣಾಮವಾಗಿ ವಾಹನಗಳ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸೇತುವೆಯ ಮೇಲೆ ವಾಹನಗಳು ಹೋಗುವಾಗ ದಾರಿ ಕಾಣದೆ ಅನೇಕ ವಾಹನಗಳು ಹಳ್ಳಕ್ಕೆ ಮುಗುಚಿಕೊಂಡಿರುವ ಘಟನೆಗಳು ನಡೆದಿವೆ. ಹಳ್ಳದ
ನೀರು ಭತ್ತದ ಗದ್ದೆಗಳಿಗೆ ನುಗ್ಗಿ,‌ ನೂರಾರು ಎಕರೆ ಭತ್ತದ ಬೆಳೆ ಹಾನಿಗೋಡಾಗಿದೆ.

ADVERTISEMENT

ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಈ ಸ್ಥಳದಲ್ಲಿ ಮೇಲ್ಸೇತುವೆಯನ್ನು ನಿರ್ಮಿಸಲು ಶಾಸಕ ಪ್ರೊ.ಎನ್. ಲಿಂಗಣ್ಣ ಅವರು ಗಮನಹರಿಸಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸಬೇಕು. ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಮುಂದಾಗಬೇಕು ಎಂದು ರೈತ ಸಂಘದ ಅಧ್ಯಕ್ಷ ರವಿಕುಮಾರ್ ಹಾಗೂ ಗಣೇಶ್ ಆಗ್ರಹಿಸಿದ್ದಾರೆ.

ಮೇಲ್ಸೇತುವೆ ನಿರ್ಮಾಣಕ್ಕೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಮೇಲ್ಸೇತುವೆಯನ್ನು ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಿ, ಸುಗಮ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.