ADVERTISEMENT

ಅತಿವಿಶ್ವಾಸವೇ ಕಾಂಗ್ರೆಸ್ ಸೋಲಿಗೆ ಕಾರಣ

ಮಾಜಿ ಸಂಸದ ಚಂದ್ರಪ್ಪ ಅನಿಸಿಕೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 4:47 IST
Last Updated 5 ಜನವರಿ 2022, 4:47 IST
ಜಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಂಸದ ಚಂದ್ರಪ್ಪ ಮಾತನಾಡಿದರು.
ಜಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಂಸದ ಚಂದ್ರಪ್ಪ ಮಾತನಾಡಿದರು.   

ಜಗಳೂರು: ಅತಿಯಾದ ವಿಶ್ವಾಸದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಯಿತು ಎಂದು ಮಾಜಿ ಸಂಸದ ಚಂದ್ರಪ್ಪ ಹೇಳಿದರು.

ಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸೋಮವಾರ ಹಮ್ಮಿಕೊಂಡಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಗೆದ್ದಿದೆ. ಚಿತ್ರದುರ್ಗ ಹಾಗೂ ದಾವಣಗೆರೆ ಅವಳಿ ಜಿಲ್ಲೆಗಳಲ್ಲಿ ಪಕ್ಷಕ್ಕೆ ಅತಿಹೆಚ್ಚು ಮತಗಳು ಬಂದಿದ್ದು, ಸ್ಥಳೀಯ ಮುಖಂಡರು ಮತ್ತು ಕಾರ್ಯರ್ತರ ಶ್ರಮ ಅಪಾರವಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರು ತಳಮಟ್ಟದಲ್ಲಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ರೈತರ ₹ 72 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಆದರೆ, ಈಗಿನ ಪ್ರಧಾನಿ ಮೋದಿ ಅವರು ವರ್ಷದಿಂದ ಪ್ರತಿಭಟನೆ ನಡೆಸಿದ ರೈತರ ಸಮಸ್ಯೆಗಳನ್ನು ಕೇಳುವ ಸೌಜನ್ಯ ತೋರಲಿಲ್ಲ. ಅವರ ನಿರ್ಲಕ್ಷ್ಯದಿಂದ ಸುಮಾರು 850 ರೈತರು ಜೀವ ಕಳೆದುಕೊಳ್ಳಬೇಕಾಯಿತು ಎಂದು ಹೇಳಿದರು.

ಪರಾಜಿತ ಅಭ್ಯರ್ಥಿ ಸೋಮಶೇಖರ್ ಮಾತನಾಡಿ, ‘ಕ್ಷೇತ್ರಕ್ಕೆ ನಾನು ಹೊಸಬನಾಗಿದ್ದರೂ ಮತದಾರರು ಹೆಚ್ಚು ಮತಗಳನ್ನು ನೀಡಿ ಆಶೀರ್ವಾದಿಸಿದ್ದಾರೆ. ಚುನಾವಣೆಯಲ್ಲಿ ಹಣವೊಂದೇ ಮುಖ್ಯ ಅಲ್ಲ ಎನ್ನುವುದು ಈ ಚುನಾವಣೆಯಲ್ಲಿ ಸಾಬೀತಾಯಿತು’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ಅರಸೀಕೆರೆ ಅಧ್ಯಕ್ಷ ಮಂಜುನಾಥ್, ಕೆಪಿಸಿಸಿ ಎಸ್‌ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ, ಮುಖಂಡರಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಕ್ಲಲೇಶ್ ರಾಜ್ ಪಟೇಲ್, ಪಲ್ಲಾಗಟ್ಟೆ ಶೇಖರಪ್ಪ, ತಿಪ್ಪೇಸ್ವಾಮಿ , ಎನ್. ಓಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.