ಹೊನ್ನಾಳಿ: ‘ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ಅರ್ಹತೆ ಇದ್ದವರಿಗೆ ಸಚಿವ ಸ್ಥಾನ ನೀಡಿ ಎಂದು ಹೇಳುತ್ತಾರೆಯೇ ಹೊರತು ಅವರಿಗೆ ಕೊಡಿ, ಇವರಿಗೆ ಕೊಡಬೇಡಿ ಎಂದು ಹೇಳುವುದಿಲ್ಲ’ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸಂಪುಟದಲ್ಲಿ ನನ್ನ ಹೆಸರು ಇದೆಯೋ ಇಲ್ಲವೋ ಗೊತ್ತಿಲ್ಲ. ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಅವರು ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧ’ ಎಂದು ಹೇಳಿದರು.
‘ಈ ಹಿಂದೆ ನಾಲ್ಕು ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಸಚಿವ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ’ ಎಂದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರನ್ನು ಭೇಟಿ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರ ಆಶೀರ್ವಾದ ಪಡೆಯಲು ಹೋಗಿದ್ದರು. ಇಲ್ಲಿ ಹೊಂದಾಣಿಕೆಯ ಮಾತಿಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ಇದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪ ಮಾಡುವುದು ಮಾಮೂಲು. ಅವರು ಹಿರಿಯರು. ಸಲಹೆ ಕೊಟ್ಟರೆ ಅದನ್ನು ಸ್ವೀಕರಿಸುತ್ತೇನೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.