ದಾವಣಗೆರೆ: ಜೆ.ಜೆ.ಎಂ. ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಶಿಷ್ಯವೇತನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಡಳಿತ ಮಂಡಳಿ ಜೊತೆ ಸಭೆ ನಡೆಸಿದ್ದು, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಹೊರಬಂದಿಲ್ಲ.
ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್.ಎಸ್. ಗಣೇಶ್ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
‘ಆಡಳಿತ ಮಂಡಳಿಯೇ ಶಿಷ್ಯವೇತನ ನೀಡುವಂತೆ ಮುಖ್ಯಮಂತ್ರಿ ಕೇಳಿಕೊಂಡರು. ಜಿಲ್ಲಾ ಆಸ್ಪತ್ರೆಯನ್ನು ಬಳಸಿಕೊಳ್ಳುತ್ತಿರುವುದರಿಂದ ಈಗಾಗಲೇ ಕಾಲೇಜಿನಿಂದ ₹ 2 ಕೋಟಿಯನ್ನು ಕೊಡುತ್ತಿದ್ದೇವೆ. ನಮ್ಮ ಕಾಲೇಜಿನ 80 ವೈದ್ಯರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. ವೈದ್ಯರ ತಿಂಗಳ ಸಂಬಳ ₹ 1 ಕೋಟಿ ಆಗಲಿದ್ದು, ಅದನ್ನೂ ನಾವೇ ಕೊಡುತ್ತಿದ್ದೇವೆ. ನಮ್ಮ 80 ವೈದ್ಯರು ವಾಪಸ್ ಬಂದರೆ ಜಿಲ್ಲಾ ಆಸ್ಪತ್ರೆಗೆ ಜನ ಬರುತ್ತಾರೆಯೇ? ಆಸ್ಪತ್ರೆ ನಡೆಯಲು ಸಾಧ್ಯವೇ ಎಂದು ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದು ಶಾಮನೂರು ಶಿವಶಂಕರಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
‘ನಮ್ಮ ನಿಲುವನ್ನು ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದೇವೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಶಿಷ್ಯವೇತನ ಸಮಸ್ಯೆಗೆ ಪರಿಹರ ಕಂಡುಕೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.