
ದಾವಣಗೆರೆ: ಏಕಕಾಲದಲ್ಲಿ ಹಲವು ಚುನಾವಣೆಗಳು ನಡೆಯುವುದರಿಂದ ಆಡಳಿತ ವೆಚ್ಚದಲ್ಲಿ ಗಣನೀಯ ಉಳಿತಾಯವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಕೆ. ಆಂಟನಿ ಅಭಿಪ್ರಾಯಪಟ್ಟರು.
ಇಲ್ಲಿನ ಜಿಎಂ ವಿಶ್ವವಿದ್ಯಾಲಯದಲ್ಲಿ ‘ಯುವಜನ – ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಒಂದೇ ಬಾರಿಗೆ ಚುನಾವಣೆ ನಡೆದರೆ ಸರ್ಕಾರಗಳು ದೀರ್ಘಕಾಲೀನ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಲು ಸಾಧ್ಯವಾಗುತ್ತದೆ. ಪ್ರಜಾಪ್ರಭುತ್ವವನ್ನು ಬಲಪಡಿಸುವ ಚುನಾವಣಾ ಸುಧಾರಣೆಗಳನ್ನು ಯುವಜನರು ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಉದ್ದೇಶ, ಪ್ರಸ್ತುತತೆ ಹಾಗೂ ಭವಿಷ್ಯದ ಪರಿಣಾಮಗಳ ಕುರಿತು ವಿವರವಾಗಿ ತಿಳಿಸಿದರು. ಬಿಜೆಪಿ ಮುಖಂಡ ಜಿ.ಎಸ್. ಅನಿತ್ ಕುಮಾರ್, ಕುಲಸಚಿವ ಸುನೀಲ್ ಕುಮಾರ್ ಬಿ.ಎಸ್, ಡಿ. ರವಿನಾಥ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.