ಹರಪನಹಳ್ಳಿ: ಅಕ್ಟೋಬರ್ 1ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡದಿದ್ದರೆ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಪಂಚಮಸಾಲಿ ಸಮಾಜದಿಂದ ಹಮ್ಮಿಕೊಂಡಿದ್ದ ಪಂಚಾಯತ್ ಪ್ರತಿಜ್ಞೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಸರ್ಕಾರಕ್ಕೆ ಕೊಟ್ಟಿರುವ ಗಡುವು ಈಗಾಗಲೇ ಮುಗಿದಿದೆ. ನಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತದೆ ಎಂಬ ಭರವಸೆ ಇಟ್ಟಿದ್ದೇವೆ. ಈಡೇರಿಸದಿದ್ದರೇ ಸಮಾಜದವರು ಹೋರಾಟಕ್ಕೆ ಬೆಂಗಳೂರಿಗೆ ಬರಬೇಕು’ ಎಂದು ಕರೆ ನೀಡಿದರು.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವ ತನಕ ಶ್ರೀಗಳ ನೇತೃತ್ವದಲ್ಲಿ ಹೋರಾಟ ನಿರಂತರವಾಗಿರುತ್ತದೆ’ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಸಮಾಜದವರು ಪಕ್ಷಾತೀತವಾಗಿ ಸಮಾಜದ ಅಭ್ಯರ್ಥಿಯನ್ನೇ ಬೆಂಬಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಪಂಚಾಯತ್ ಪ್ರತಿಜ್ಞೆ ತಂಡ ಮತ್ತು ಸ್ವಾಮೀಜಿ ಅವರನ್ನು ಮಹಿಳೆಯರು ಪೂರ್ಣ ಕುಂಭ ಮತ್ತು ಆರತಿ ಬೆಳಗಿ ಸ್ವಾಗತಿಸಿದರು.
ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ. ಎಚ್.ಎಸ್. ಶಿವಶಂಕರ್, ಅಕ್ಷರ ಸೀಡ್ಸ್ ಕಂಪನಿ ಮಾಲೀಕ ಅರಸೀಕೆರೆ ಎನ್. ಕೊಟ್ರೇಶ್, ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್ ಚಂದ್ರ, ಮಾಜಿ ಮೇಯರ್ ಅಜಯ್
ಕುಮಾರ್, ಜಿಲ್ಲಾ ಅಧ್ಯಕ್ಷ ಭದ್ರವಾಡಿ ಚಂದ್ರಶೇಖರ್, ಮಲ್ಲಿಕಾರ್ಜುನ ಗೌಡ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಪೂಜಾರ, ಅಡವಿಹಳ್ಳಿ ಬಸವರಾಜ್, ಮತ್ತಿಹಳ್ಳಿ ಅಜ್ಜಣ್ಣ, ಎ. ವೀರಣ್ಣ, ಶಂಬಣ್ಣ, ಕೊಟ್ರೇಶಪ್ಪ, ಪ್ರಕಾಶ್ ಪಾಟೀಲ್, ಜಗದೀಶ್, ಶಾರದಮ್ಮ ಕೊಟ್ರೇಶ್ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.