ADVERTISEMENT

ದಾವಣಗೆರೆಯಲ್ಲಿ ಪಾದಯಾತ್ರೆಗೆ ಜನಬಲ

‘ರಾಜನಹಳ್ಳಿಯಿಂದ ರಾಜಧಾನಿ’ಗೆ ಹೊರಟ ಪಾದಯಾತ್ರೆಗೆ ಸ್ವಾಮೀಜಿಗಳ ಬೆಂಬಲ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 20:21 IST
Last Updated 10 ಜೂನ್ 2019, 20:21 IST
ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ನಡೆದ ಪಾದಯಾತ್ರೆ ಸೋಮವಾರ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ತಲುಪಿತು
ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ನಡೆದ ಪಾದಯಾತ್ರೆ ಸೋಮವಾರ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ತಲುಪಿತು   

ದಾವಣಗೆರೆ: ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ‘ರಾಜನಹಳ್ಳಿಯಿಂದ ರಾಜಧಾನಿ’ಗೆ ಹೊರಟ ಬೃಹತ್ ಪಾದಯಾತ್ರೆ ಸೋಮವಾರ ದಾವಣಗೆರೆಯಿಂದ ಹೊರಟಿತು.

ಭಾನುವಾರ ಸಾಯಂಕಾಲ ದಾವಣಗೆರೆಗೆ ಬಂದಿದ್ದ ನಾಯಕ ಸಮಾಜದ ಮುಖಂಡರು ರಾತ್ರಿ ನಾಯಕರ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯ ಹೂಡಿ ಸೋಮವಾರ ಬೆಳಿಗ್ಗೆ ಅನಗೋಡು ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದರು.

ನಾಯಕರ ಹಾಸ್ಟೆಲ್‌ನಿಂದ ಪಾದಯಾತ್ರೆ ಹೊರಡುವ ವೇಳೆ ಮಹಿಳೆಯರು ಸ್ವಾಗತಿಸಿದರು. ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಯದೇವ ವೃತ್ತ, ಗಾಂಧಿವೃತ್ತ ತಲುಪಿ ಪಿ.ಬಿ. ರಸ್ತೆಯ ಮೂಲಕ ಅನಗೋಡಿಗೆ ಪ್ರಯಾಣ ಬೆಳೆಸಿತು.

ADVERTISEMENT

ಪಾದಯಾತ್ರೆಯ ನೇತೃತ್ವ ವಹಿಸಿದ್ದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಬೆಂಬಲ ಸೂಚಿಸಿದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸ್ವಾಮೀಜಿ ಪಾದಯಾತ್ರೆಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರಸನ್ನಾನಂದ ಪುರಿ ಸ್ವಾಮೀಜಿ ಸ್ವಾಮೀಜಿ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಒಂದು ದೊಡ್ಡ ಶಕ್ತಿಯಾಗಿ ರೂಪುಗೊಳ್ಳಲಿ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಶಿವಯೋಗಿಸ್ವಾಮಿ ಮಾತನಾಡಿ, ‘ಸ್ವಾಮೀಜಿಗಳ ಪಾದಯಾತ್ರೆ ಬೆಂಗಳೂರಿಗೆ ಹೋಗುವ ಅನಿವಾರ್ಯ ಸ್ಥಿತಿ ಬರಬಾರದಿತ್ತು. ಸರ್ಕಾರ ಅದಕ್ಕೆ ಅವಕಾಶ ಮಾಡಬಾರದಿತ್ತು. ಸರ್ಕಾರ ಶೀಘ್ರ ಮೀಸಲಾತಿ ನೀಡುವ ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಎ. ರವೀಂದ್ರನಾಥ್‌ ಮಾತನಾಡಿ ‘ಸರ್ಕಾರ ಎಷ್ಟು ಜಿಡ್ಡುಗಟ್ಟಿದೆ ಎಂಬುದು ಇದರಿಂದ ತಿಳಿಯುತ್ತದೆ. ರಾಜಕೀಯದಿಂದಲೇ ಈ ಸರ್ಕಾರಕ್ಕೆ ಬುದ್ಧಿ ಕಲಿಸಬೇಕು. ಪಾದಯಾತ್ರೆ ಬೆಂಗಳೂರಿಗೆ ಹೋಗಲು ಸರ್ಕಾರ ಅವಕಾಶ ಮಾಡಿಕೊಡಬಾರದು. ಶೀಘ್ರ ಮೀಸಲಾತಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್‌ ಜಾಧವ್ ‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡಲು ಸರ್ಕಾರ ಮೀನಮೇಷ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ಇದನ್ನು ಅರ್ಥಮಾಡಿಕೊಳ್ಳಬೇಕು’ ಎಂದರು.

ಸಮಾಜದ ಮುಖಂಡರಾದ ಡಾ. ವೈ.ರಾಮಪ್ಪ ‘ಒಂದು ವೇಳೆ ಜಾತಿ ಜನಗಣತಿ ವರದಿ ಬಹಿರಂಗೊಂಡಿದ್ದರೆ ಪಾದಯಾತ್ರೆ ಮಾಡುವ ಪ್ರಮೇಯವೇ ಬರುತ್ತಿರಲಿಲ್ಲ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಚ್. ಓಬಳಪ್ಪ ಮಾತನಾಡಿ, ಇದೇ 25ರಂದು ಬೆಂಗಳೂರಿನಲ್ಲಿ ನಡೆಯುವ ಹೋರಾಟಕ್ಕೆ ಪ್ರತಿ ತಾಲ್ಲೂಕುಗಳಿಗೆ 100 ಬಸ್ ವ್ಯವಸ್ಥೆ ಮಾಡಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಹೇಳಿದರು.

ಸಮಾಜದ ಮುಖಂಡರಾದ ಎಚ್‌.ಕೆ. ರಾಮಚಂದ್ರಪ್ಪ, ದಾವಣಗೆರೆ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎಂ.ಬಿ.ಹಾಲಪ್ಪ, ರಘು ದೊಡ್ಮನಿ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.