ADVERTISEMENT

ಕರ್ತವ್ಯ ನಿರ್ವಹಿಸಿ, ಹಕ್ಕು ಕೇಳಿ

ಸಂವಿಧಾನ ದಿನಾಚರಣೆಯಲ್ಲಿ ನ್ಯಾಯಾಧೀಶ ಸಾಬಪ್ಪ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 14:19 IST
Last Updated 22 ಅಕ್ಟೋಬರ್ 2020, 14:19 IST
ದಾವಣಗೆರೆಯ ಹಳೆ ಕೋರ್ಟ್ ಆವರಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆ ನಡೆಯಿತು
ದಾವಣಗೆರೆಯ ಹಳೆ ಕೋರ್ಟ್ ಆವರಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆ ನಡೆಯಿತು   

ದಾವಣಗೆರೆ: ‘ಹಕ್ಕುಗಳು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಾವು ಕರ್ತವ್ಯ ನಿರ್ವಹಿಸಿದಾಗ ಮಾತ್ರ ನಮ್ಮ ಹಕ್ಕು ಕೇಳಲು ಅರ್ಹರಾಗುತ್ತೇವೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಇಂಡಿಯನ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಘಟನೆ ಆಶ್ರಯದಲ್ಲಿ ನಗರದ ಹಳೇ ಕೋರ್ಟ್ ಆವರಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆ ಅಭಿಯಾನ ಅಂಗವಾಗಿ ಹಮ್ಮಿಕೊಂಡಿದ್ದ ‘ಮೂಲಭೂತ ಕರ್ತವ್ಯಗಳು’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರು ಇಂದು ಕೇವಲ ಹಕ್ಕುಗಳನ್ನು ಮಾತ್ರ ಕೇಳುತ್ತಿದ್ದಾರೆ. ಆದರೆ ತಮ್ಮ ಮೂಲಭೂತ ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಇದು ಸರಿಯಲ್ಲ. ಭಾರತ ದೇಶ ಹಲವು ಜಾತಿ, ಮತ, ಪಂಥ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈವಿಧ್ಯ ಹೊಂದಿದೆ. ವಿವಿಧತೆಯಲ್ಲಿ ಏಕತೆ ಸಾರಬೇಕಾಗಿದೆ ಎಂದರು.

ADVERTISEMENT

ಸಂಪನ್ಮೂಲ ವ್ಯಕ್ತಿ ವಕೀಲ ಅನೀಸ್ ಪಾಷಾ, ‘ಮೂಲಭೂತ ಕರ್ತವ್ಯಗಳು ಜನಸಾಮಾನ್ಯರಿಗೆ ಅಷ್ಟೇ ಅಲ್ಲ, ಜನಪ್ರತಿನಿಧಿಗಳಿಗೂ ತಿಳಿಯಪಡಿಸಬೇಕಿದೆ. ಬಂದ್ ಸಂದರ್ಭದಲ್ಲಿ ಸಾರ್ವಜನಿಕ ಸ್ವತ್ತುಗಳನ್ನು ಯಾರೂ ನಾಶ ಮಾಡಬಾರದು. ಅವುಗಳನ್ನು ಸಂರಕ್ಷಿಸಬೇಕಾಗಿದ್ದು, ನಮ್ಮೆಲ್ಲರ ಜವಾಬ್ದಾರಿ. ದೇಶವು ನಮ್ಮ ಮನೆ ಎಂದು ತಿಳಿದು ಸಾರ್ವಜನಿಕ ಸ್ವತ್ತುಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಮುಂದಾಗಬೇಕು’ ಎಂದು ಸಲಹೆ ನೀಡಿದರು.

1975ರಲ್ಲಿ ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಸ್ವರ್ಣಸಿಂಗ್ ಆಯೋಗದ ಮೂಲಕ 51ಎ ಅನುಸೂಚಿತ 42ನೇ ತಿದ್ದುಪಡಿಯಲ್ಲಿ 11 ಮೂಲಭೂತ ಕರ್ತವ್ಯಗಳನ್ನು ಜಾರಿಗೆ ತರಲಾಯಿತು ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರಾದ ಸದಸ್ಯ ಎಲ್.ಎಚ್. ಅರುಣಕುಮಾರ್, ‘ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನಗೈದ ಎಲ್ಲ ಮಹನೀಯರನ್ನು ನೆನಪಿಸಿಕೊಂಡು, ಗೌರವಿಸುವುದು ನಮ್ಮ ಮೂಲಭೂತ ಕರ್ತವ್ಯ. ಅಂದು ದೇಶಕ್ಕಾಗಿ ಹೋರಾಡಿ 27ನೇ ವರ್ಷ ವಯಸ್ಸಿನಲ್ಲಿಯೇ ಬ್ರಿಟಿಷರ ನೇಣಿಗೆ ಕೊರಳೊಡ್ಡಿದ ಕ್ರಾಂತಿಕಾರಿ ಅಷ್ಪಾಖುಲ್ಲಾ ಖಾನ್ ಅವರ ಜನ್ಮದಿನ ಇಂದು’ ಎಂದು ಸ್ಮರಿಸಿದರು.

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಲಿಂಗರಾಜ್ ಬಿ.ಎಸ್., ‘ಕಾನೂನು ಸೇವಾ ಪ್ರಾಧಿಕಾರವು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಕಾನೂನಿನ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ’ ಎಂದರು.

ಬೀಡಿ ಕಾರ್ಮಿಕರ ಸಂಘದ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ, ವಕೀಲರಾದ ಕಲೀಂ, ಅಬ್ದುಲ್ ಜಬ್ಬಾರ್, ಅಬ್ದುಲ್ ಸಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.