
ದಾವಣಗೆರೆ: ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಮಠ ಸ್ಥಾಪಸಲು ಮುಂದಾಗಿರುವವರು ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಭಾವಚಿತ್ರ, ಹೆಸರು ಬಳಸಬಾರದು ಎಂದು ಸಮುದಾಯದ ಮುಖಂಡ ಎಚ್. ವಿಶ್ವನಾಥ್ ಒತ್ತಾಯಿಸಿದರು.
‘ಸಮುದಾಯಕ್ಕೆ ರಾಜ್ಯದಲ್ಲಿ ಆದಿಜಾಂಬವ ಮಠ ಹಾಗೂ ಮಾದಾರ ಚನ್ನಯ್ಯ ಗುರುಪೀಠಗಳಿವೆ. ಈ ಮಠಗಳು ಸಮುದಾಯ ಸಂಘಟನೆ, ಧಾರ್ಮಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿವೆ. ಈ ಮಠಗಳ ಅನುಮತಿ ಪಡೆಯದೇ, ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ತೀರ್ಮಾನ ಕೈಗೊಂಡಿದ್ದು ಸರಿಯಲ್ಲ’ ಎಂದು ಗುರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
‘ಸಮುದಾಯದ ಎರಡು ಗುರುಪೀಠಗಳು ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿವೆ. ದಾವಣಗೆರೆ ಜಿಲ್ಲೆಯ ಭಕ್ತರು ಈ ಎರಡು ಮಠಗಳಿಗೆ ನಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಗುರುಪೀಠ ಅಥವಾ ಶಾಖಾ ಮಠದ ಅಗತ್ಯ ಇರಲಿಲ್ಲ. ಮಠ ಸ್ಥಾಪಿಸುವ ತೀರ್ಮಾನಕ್ಕೆ ಬರುವ ಮುನ್ನ ಸಮುದಾಯದ ಸಭೆ ನಡೆಸಿದ್ದರೆ ಅನುಕೂಲ ಆಗುತ್ತಿತ್ತು. ಕೆಲವರು ಸೇರಿ ಕರೆದಿರುವ ಪೂರ್ವಭಾವಿ ಸಭೆಯಲ್ಲಿ ಸಮುದಾಯದ ಅನೇಕರು ಪಾಲ್ಗೊಳ್ಳುವುದಿಲ್ಲ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.