ADVERTISEMENT

ರಾಮ ಮಂದಿರಕ್ಕೆ ಅಡಿಗಲ್ಲು: ದಾವಣಗೆರೆ ಜಿಲ್ಲೆಯಾದ್ಯಂತ ನಾಳೆ ನಿಷೇಧಾಜ್ಞೆ ಜಾರಿ

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 12:07 IST
Last Updated 4 ಆಗಸ್ಟ್ 2020, 12:07 IST
ಮಹಾಂತೇಶ ಬೀಳಗಿ
ಮಹಾಂತೇಶ ಬೀಳಗಿ   

ದಾವಣಗೆರೆ: ‘ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆಗಸ್ಟ್ 5ರಂದು ಜಿಲ್ಲೆಯಾದ್ಯಂತ ಬೆಳಿಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

‘ಅಯೋಧ್ಯ ವಿಚಾರವನ್ನು ಅತೀ ಸೂಕ್ಷ್ಮ ವಿಚಾರವಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವುದು, ದೇವರ ಭಾವಚಿತ್ರಗಳನ್ನಿಟ್ಟು ಪೂಜಾ ಕಾರ್ಯಕ್ರಮಗಳು, ಪ್ರತಿಭಟನೆ ನಡೆಸುವುದು ಜೊತೆಗೆ ಯಾವುದೇ ರೀತಿಯ ಭಾವಚಿತ್ರ, ಬ್ಯಾನರ್ಸ್, ಬಂಟಿಂಗ್ಸ್‌ಗಳನ್ನು ಹಾಕುವುದನ್ನು ನಿಷೇಧಿಸಲಾಗಿದೆ’ ಎಂದು ಡಿಸಿ ತಿಳಿಸಿದ್ದಾರೆ.

‘ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮ ದೇವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಸಾಧ್ಯತೆಗಳು ಇದ್ದು, ಈ ಸಂದರ್ಭದಲ್ಲಿ ಕೆಲವು ಮತೀಯ ಸಂಘಟನೆಗಳು ಹಾಗೂ ಹೋರಾಟಗಾರರು ಅಡಚಣೆ ಉಂಟು ಮಾಡಿ ಕಾನೂನು ಸುವ್ಯವಸ್ಥೆ ಧಕ್ಕೆಯುಂಟು ಮಾಡುವ ಸಂಭವವಿದೆ. ಕೆಲವು ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಕಪ್ಪುಬಟ್ಟೆ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಗಳಿವೆ’ ಆದ್ದರಿಂದ ಅನುಮತಿ ಇಲ್ಲದೇ ಅಳವಡಿಸಿರುವ ಭಾವಚಿತ್ರ, ಬ್ಯಾನರ್ಸ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಬೇಕು’ ಎಂದು ಸ್ಥಳೀಯ ಸಂಸ್ಥೆಗಳಿಗೆ ಮಹಾಂತೇಶ ಬೀಳಗಿ ಸೂಚಿಸಿದ್ದಾರೆ.

ADVERTISEMENT

‘ಯಾವುದೇ ರೀತಿಯ ಮೆರವಣಿಗೆ, ಬೈಕ್ ರ‍್ಯಾಲಿ, ಪಟಾಕಿ ಸಿಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಲೈವ್ ಎಲ್‍ಇಡಿ ಡಿಸ್‍ಪ್ಲೇ ಹಾಕುವುದು, ಕೊರೊನಾ ಹರಡುವಿಕೆ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಪೂಜೆ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.ಜಿಲ್ಲೆಯ ಎಲ್ಲಾ ಪಟಾಕಿ ಅಂಗಡಿಗಳನ್ನು ಮುಚ್ಚಬೇಕು’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.