ADVERTISEMENT

ಮುಖ್ಯಮಂತ್ರಿಗಳಿಂದ ಸೂಕ್ತ ನಿರ್ಧಾರ

ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 3:36 IST
Last Updated 1 ಆಗಸ್ಟ್ 2021, 3:36 IST
ಎಸ್‌.ವಿ. ರಾಮಚಂದ್ರ
ಎಸ್‌.ವಿ. ರಾಮಚಂದ್ರ   

ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಶೇ 7.5 ಮೀಸಲಾತಿ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದರು.

‘ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಅವರು ಈಗಾಗಲೇ ಹೋರಾಟ ನಡೆಸಿದ್ದಾರೆ. ಅವರ ಹೋರಾಟಕ್ಕೆ ನಾವು ಕೈಜೋಡಿಸಿದ್ದೇವೆ. ಕರ್ನಾಟಕ ಪ್ರವಾಹ ಹಾಗೂ ಕೊರೊನಾದ ಸಂಕಷ್ಟ ಸ್ಥಿತಿಯಲ್ಲಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಿದ್ದಾರೆ. ಸ್ವಲ್ಪ ದಿನವಾದ ಬಳಿಕ ಕೇಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜಕ್ಕೆ ಸ್ಪಂದಿಸಿದ್ದರು. ಒಂದು ಸಮಿತಿ ರಚಿಸಿ ಶಿಫಾರಸು ಕೂಡ ಪಡೆದಿದ್ದರು. ಬಸವರಾಜ ಬೊಮ್ಮಾಯಿ ಅವರು ಕೂಡಾ ವಾಲ್ಮೀಕಿ ಸಮಾಜದೊಂದಿಗೆ ಇದ್ದು, ಸಮಾಜದ ಸಭೆಗಳಲ್ಲಿ ಭಾಗವಹಿಸಿ ಸ್ಥೈರ್ಯ ತುಂಬಿದ್ದಾರೆ. ಈವಿಚಾರವಾಗಿ ಸಿಎಂ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯದ ಕೇಂದ್ರ ಬಿಂದುವಾದ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ಬೇಕು. ಈ ಹಿಂದೆ ಸಚಿವ ಸ್ಥಾನ ನೀಡದೇ ಇದ್ದಿದ್ದು, ಬೈರತಿ ಬಸವರಾಜ ಅವರು ಉಸ್ತುವಾರಿ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.ಜಿಲ್ಲೆಯಲ್ಲಿ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.