ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ಸೋಮವಾರ ಜಯದೇವ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಈ ಶಿಕ್ಷಣದ ತರಬೇತಿಯನ್ನು ಕಾರ್ಯಕರ್ತೆಯರಿಗೆ ನೀಡಬೇಕು. ಐಸಿಡಿಎಸ್ ಯೋಜನೆ ಉಳಿಸಬೇಕು. ಪಠ್ಯಪುಸ್ತಕ, ಸಮವಸ್ತ್ರ ಒದಗಿಸಬೇಕು. ಅಂಗನವಾಡಿಗಳಿಂದಲೇ ವರ್ಗಾವಣೆ ಪತ್ರ ನೀಡಲು ಅವಕಾಶ ನೀಡಬೇಕು. ಸಮಸ್ಯೆಗಳನ್ನು ಆಲಿಸದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರನ್ನು ಕೈಬಿಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರನ್ನು ಕಾಯಂಗೊಳಿಸಬೇಕು. ನಿವೃತ್ತರಾದವರಿಗೆ ನಿವೃತ್ತಿ ವೇತನ ನೀಡಬೇಕು. ಎನ್ಪಿಎಸ್ ಯೋಜನೆಯ ಹಣ ಕೂಡಲೇ ನೀಡಬೇಕು. ಕೊರೊನಾ ವಾರಿಯರ್ಗಳಾಗಿ ಕೆಲಸ ಮಾಡಿದಕಾರ್ಯಕರ್ತೆ, ಸಹಾಯಕಿಯರಲ್ಲಿ ರಾಜ್ಯದಲ್ಲಿ 25, ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಳಿಗೆ ನಿಯಮದಂತೆ ₹ 30 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉಪ ವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಜಿಲ್ಲಾ ಅಧ್ಯಕ್ಷೆ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ, ಮುಖಂಡರಾದ, ವಿಶಾಲಾಕ್ಷಿ, ರೇಣುಕಮ್ಮ, ಕಾಳಮ್ಮ, ಸುಧಾ, ಆವರಗೆರೆ ವಾಸು, ಆವರೆಗೆ ಚಂದ್ರು, ಆವರಗೆ ಎಚ್.ಜಿ. ಉಮೇಶ್ ಅವರೂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.