ADVERTISEMENT

ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಮೇ 2022, 4:22 IST
Last Updated 27 ಮೇ 2022, 4:22 IST
ಬೆಲೆ ಏರಿಕೆ ತಡೆಗಟ್ಟುವಂತೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯ ಜಯದೇವ ವೃತ್ತದಲ್ಲಿ ಭಾರತ ಕಮ್ಯುನಿಸ್ಟ್‌ ಪಕ್ಷ ಮತ್ತು ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ದಾವಣಗೆರೆ ಜಿಲ್ಲಾ ಮಂಡಳಿ ಸದಸ್ಯರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಬೆಲೆ ಏರಿಕೆ ತಡೆಗಟ್ಟುವಂತೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯ ಜಯದೇವ ವೃತ್ತದಲ್ಲಿ ಭಾರತ ಕಮ್ಯುನಿಸ್ಟ್‌ ಪಕ್ಷ ಮತ್ತು ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ದಾವಣಗೆರೆ ಜಿಲ್ಲಾ ಮಂಡಳಿ ಸದಸ್ಯರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆ ಮತ್ತು ನಿರುದ್ಯೋಗ ನಿವಾರಣೆ ಮಾಡುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ಸಿಪಿಐ, ಸಿಪಿಐಎಂ ಜಂಟಿಯಾಗಿ ಗುರುವಾರ ಜಯದೇವ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದವು.

ದೇಶದಲ್ಲಿ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಅಡುಗೆ ಎಣ್ಣೆ ಇನ್ನಿತರೇ ವಸ್ತುಗಳ ಬೆಲೆಗಳು ನಿತ್ಯ ಏರುತ್ತಿವೆ. ಇದರಿಂದ ದುಡಿಯುವ ವರ್ಗದ ಜನರು ಕೊಳ್ಳುವ ಶಕ್ತಿ ಕಳೆದುಕೊಂಡು ನಲುಗುತ್ತಿದ್ದಾರೆ ಎಂದು ಸಿಪಿಐ ಮುಖಂಡ ಆವರಗೆರೆ ಎಚ್.ಜಿ. ಉಮೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಆರ್ಥಿಕ ನೀತಿಯಿಂದಾಗಿ ಕೈಗಾರಿಕೆ ನಡೆಸಲಾಗದೇ ಮುಚ್ಚಲಾಗುತ್ತಿದೆ. ಇದರ ಪರಿಣಾಮ ಕಾರ್ಮಿಕರು ಕೆಲಸವನ್ನು ಕಳೆದುಕೊಳ್ಳುತ್ತಿದ್ದಾರೆ. ಯಾವುದೇ ಪದವಿ ಪಡೆದರೂ ಉದ್ಯೋಗ ಸಿಗದೆ ಯುವ ಜನರು ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಬೆಲೆ ಏರಿಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದರು.

ADVERTISEMENT

ಪೆಟ್ರೋಲಿಯಂ ಉತ್ಪದನಾ ವಸ್ತುಗಳ ಮೇಲಿನ ಎಲ್ಲ ಸರ್ ಚಾರ್ಜ್ ಹಾಗೂ ಸೆಸ್‍ನ್ನು ಹಿಂಪಡೆಯಬೇಕು. ಈ ಹಿಂದೆ ಜಾರಿಯಲ್ಲಿದ್ದ ಅಡುಗೆ ಅನಿಲದ ಸಬ್ಸಿಡಿಯನ್ನು ದುಡಿಯುವ ಎಲ್ಲ ಕುಟುಂಬಗಳಿಗೆ ಪ್ರತಿ ಸಿಲಿಂಡರ್‍ಗೆ ₹ 200 ಸಬ್ಸಿಡಿ ಪುನಃ ಜಾರಿಗೆ ತರಬೇಕು. ಪೆಟ್ರೋಲ್, ಡೀಸೆಲ್‍ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆ ದರದ ಏರಿಕೆ ನೆವ ಕೈಬಿಟ್ಟು ದೇಶದ ರೈತರಿಗೆ, ನಾಗರಿಕರಿಗೆ ಕೈಗೆಟಕುವ ಬೆಲೆಯಲ್ಲಿ ಸರ್ಕಾರ ಪೂರೈಸಬೇಕು ಎಂದು ಒತ್ತಾಯಿಸಿದರು. ಬಳಿಕ ಕಂದಾಯ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಹೋಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಿಪಿಐನ ಆವರಗೆರೆ ಚಂದ್ರು, ಆವರಗೆರೆ ವಾಸು, ಆನಂದರಾಜ್, ಐರಣಿ ಚಂದ್ರು, ಸರೋಜ, ಷಣ್ಮುಖಪ್ಪ, ವಿ. ಲಕ್ಷ್ಮಣ್, ಶಿವಕುಮಾರ್ ಶೆಟ್ಟರ್, ಸಿಪಿಐಎಂನ ಕೆ.ಎಚ್. ಆನಂದರಾಜು, ಸುರೇಶ್ ಯರಗುಂಟೆ, ಬಸವರಾಜು, ಪರಶುರಾಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.