
ಪ್ರಾತಿನಿಧಿಕ ಚಿತ್ರ
ರಂಭಾಪುರಿ ಪೀಠ (ಬಾಳೆಹೊನ್ನೂರು): ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ರಂಭಾಪುರಿ ಪೀಠದಲ್ಲಿ ಫೆ. 27ರಿಂದ ಮಾರ್ಚ್ 3ರವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.
ಪ್ರತಿ ದಿನದ ಕಾರ್ಯಕ್ರಮಗಳು ರಂಭಾಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದ್ದು, 27ರಂದು ಧ್ವಜಾರೋಹಣ, ಹರಿದ್ರಾ ಲೇಪನದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. 28ರಂದು ಸಂಜೆ 6.30ಕ್ಕೆ ಧರ್ಮ ಮತ್ತು ಶಿಕ್ಷಣ ಕುರಿತ ಗೋಷ್ಠಿ ನಡೆಯಲಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಸೇರಿ ಹಲವರು ಭಾಗವಹಿಸಲಿದ್ದಾರೆ.
ಮಾರ್ಚ್ 1ರಂದು ಬೆಳಿಗ್ಗೆ 10.30ಕ್ಕೆ ರಂಭಾಪುರಿ ಪೀಠದ ಪರಿಸರದಲ್ಲಿ 51 ಅಡಿ ಎತ್ತರದ ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆಯ ಭೂಮಿ ಪೂಜೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೆರವೇರಿಸಲಿದ್ದು, ಬೆಳಿಗ್ಗೆ 11ಕ್ಕೆ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಶಿವಾದ್ವೈತ ಸಮಾವೇಶ ನಡೆಯಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಷಿ ‘ರಂಭಾಪುರಿ ಬೆಳಗು’ ಮಾಸಿಕ ಬಿಡುಗಡೆಗೊಳಿಸುವರು. ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಸಾಹಿತ್ಯ ಸಂಶೋಧಕ, ಷಿಕಾಗೊ ನಿವಾಸಿ ರವಿ ಹಂಜ ಅವರಿಗೆ ಪ್ರದಾನ ಮಾಡಲಾಗುವುದು. ಅ.ಭಾ.ವೀ. ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಸಿಂದಗಿಯ ಪ್ರಭು ಸಾರಂಗದೇವ ಶಿವಾಚಾರ್ಯ, ಶಿವಗಂಗಾ ಕ್ಷೇತ್ರದ ಮಲಯ ಶಾಂತಮುನಿ ಶಿವಾಚಾರ್ಯ, ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಉಪಸ್ಥಿತರಿರುವರು.
ಸಂಜೆ ಗದುಗಿನ ಪಂ.ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಸಂಗೀತ ಸೌರಭ ನಡೆಯಲಿದ್ದು, ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ಉದ್ಘಾಟಿಸುವರು.
ಮಾರ್ಚ್ 2ರಂದು ಸಂಜೆ ಧರ್ಮ ಮತ್ತು ಮಹಿಳೆ ಕುರಿತ ವಿಚಾರಗೋಷ್ಠಿ ನಡೆಯಲಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸುವರು. ಶಯನೋತ್ಸವ, ಜಗದ್ಗುರು ಶಿವಾನಂದ ಎಸ್ಟೇಟಿನಲ್ಲಿ ಪೂಜಾ-ಪ್ರಸಾದ, ಕೆಂಡಾರ್ಚನೆ ನಡೆಯುವುದು. 3ರಂದು ವಸಂತೋತ್ಸವ, ಭದ್ರಾ ನದಿ ತೀರದಲ್ಲಿ ಜರುಗುವ ಸುರಗಿ ಸಮಾರಾಧನೆಯೊಂದಿಗೆ ಜಾತ್ರಾ ಮಹೋತ್ಸವ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.