
ಜೈಲು (ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಾಲ್ಯವಿವಾಹವಾಗಿದ್ದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 45 ಸಾವಿರ ದಂಡ ವಿಧಿಸಿದೆ.
ತಾಲ್ಲೂಕಿನ ನಿವಾಸಿ ವಿನಾಯಕ (28) ಶಿಕ್ಷೆಗೆ ಗುರಿಯಾದ ಅಪರಾಧಿ. ಸಂತ್ರಸ್ತ ಬಾಲಕಿಗೆ ₹ 4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರಿ ವಕೀಲ ಎಂ.ಎಂ. ಬಸವರಾಜ್ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು.
ಶಾಲೆಯಿಂದ ಮನೆಗೆ ಮರಳುತ್ತಿದ್ದ 15 ವರ್ಷದ ಬಾಲಕಿಯನ್ನು ಅಪರಾಧಿ 2022ರ ಅ.2ರಂದು ಅಪಹರಿಸಿದ್ದ. ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ವಿನಾಯಕನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಒತ್ತಾಯಪೂರ್ವಕವಾಗಿ ಬಾಲ್ಯವಿವಾಹ ಮಾಡಿಕೊಂಡು ಅತ್ಯಾಚಾರ ಎಸಗಿದ್ದು ತನಿಖೆಯ ವೇಳೆ ಸಾಬೀತಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.