ದಾವಣಗೆರೆ: ನಗರದಿಂದ ಶ್ಯಾಗಲೆ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರು ಸೋಮವಾರ ಪ್ರತಿಭಟನೆ
ನಡೆಸಿದರು.
‘ಶ್ಯಾಗಲೆ ಗ್ರಾಮಕ್ಕೆ ಖಾಸಗಿ ಬಸ್ಗಳು ಸಂಚರಿಸುತ್ತಿದ್ದು, ಪ್ರಯಾಣ ದರ ದುಬಾರಿಯಾಗಿದೆ. ಶ್ಯಾಗಲೆ, ಲೋಕಿಕೆರೆ, ಯರವನಾಗತಿಹಳ್ಳಿ ಕ್ಯಾಂಪ್, ಕೋಲ್ಕುಂಟೆ, ಕಲ್ಬಂಡೆ, ತುರ್ಚಗಟ್ಟ, ಬೆಳವನೂರು ಗ್ರಾಮಗಳಿಂದ ಬಡ ರೈತರು, ಕೂಲಿ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸಕ್ಕೆ ದಾವಣಗೆರೆಗೆ ನಗರಕ್ಕೆ ಬರುತ್ತಿದ್ದಾರೆ. ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಬಡ ವಿದ್ಯಾರ್ಥಿ- ಕುಟುಂಬಗಳಿಗೆ ತೊಂದರೆ ಆಗುತ್ತಿದೆ’ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು.
‘ಪ್ರಸ್ತುತ ದಿನಗಳಲ್ಲಿ ಶಾಲಾ- ಕಾಲೇಜುಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆಯೇ ಇಲ್ಲದಂತಾಗಿದ್ದು, ಒಂದು ದಿನಕ್ಕೆ ₹ 60 ಖರ್ಚಾಗುತ್ತಿದೆ. ಬಡ ಕುಟುಂಬದ ಮಕ್ಕಳಿಗೆ ಇದನ್ನು ವ್ಯಯಿಸುವ ಸಾಮರ್ಥ್ಯ ಇಲ್ಲ.ಓದುವ ಕನಸು ಹೊತ್ತ ಅದೆಷ್ಟೋ ಬಡ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿದ್ದು, ತಮ್ಮ ಕನಸುಗಳಿಗೆ ಸ್ವತಃ ತಾವೇ ಎಳ್ಳುನೀರು ಬಿಟ್ಟಿದ್ದಾರೆ. ಈ ಸಮಸ್ಯೆಯ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ವಿದ್ಯಾರ್ಥಿನಿಯರು
ಆಪಾದಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷೆ ನಾಗಜ್ಯೋತಿ, ಜಂಟಿ ಕಾರ್ಯದರ್ಶಿ ಕಾವ್ಯ, ಸಂಘಟನಾಕಾರರಾದ ಪುಷ್ಪ, ಸ್ವಪ್ನ, ಲೋಕಿಕೆರೆ ಗ್ರಾಮಗಳ ಕಾವೇರಿ, ಕವಿತ, ಶಿಲ್ಪ, ಮಂಜು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.