ದಾವಣಗೆರೆ: ಚುನಾವಣಾ ಅಕ್ರಮಗಳನ್ನು ನಿಲ್ಲಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿಯವರ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿಗೆ ಆಗ್ರಹ ಪತ್ರ ನೀಡಲಾಯಿತು.
ಇದೇ ವೇಳೆ ಮಾತನಾಡಿದ ರವಿ ಕೃಷ್ಣಾರೆಡ್ಡಿ, ‘ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಕ್ಷೇತ್ರದ ಮತದಾರರಿಗೆ ಹಣ, ಬೆಲೆಬಾಳುವ ವಸ್ತುಗಳು ಮತ್ತು ಮದ್ಯ ಹಂಚುವ ಮೂಲಕ ಆಮಿಷವೊಡ್ಡಿ ಮತಗಳನ್ನು ಕೊಂಡುಕೊಳ್ಳಲು ನೋಡುತ್ತಿದ್ದು, ಆಮಿಷ ಒಡ್ಡುವ ಇಂಥ ಕ್ರಿಮಿನಲ್ ನಡವಳಿಕೆಯ ರಾಜಕಾರಣಿಗಳಿಗೆ ಕಡಿವಾಣ ಹಾಕಬೇಕು ಹಾಗೂ ಇಂಥಹ ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳನ್ನು ಚುನಾವಣಾ ಆಯೋಗಕ್ಕೆ ವರದಿ ಮಾಡಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.
ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಾತ್ರಿ ಮಾಡುವ ನಿಟ್ಟಿನಲ್ಲಿ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಆಮಿಷವೊಡ್ಡುತ್ತಿರುವ ಕಡು ಭ್ರಷ್ಟ ರಾಜಕಾರಣಿಗಳನ್ನು ಪ್ರಶ್ನೆ ಮಾಡುವ ಕೆಲಸ ಮಾಡಬೇಕಾಗುತ್ತದೆ. ಹಾಗಾಗದಂತೆ ಜಿಲ್ಲಾಡಳಿತವೇ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ತಡೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ಪಕ್ಷದ ಜಿಲ್ಲಾ ಉಸ್ತುವಾರಿ ರಘು ಜಾಣಗೆರೆ, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಸಂಗಹಳ್ಳಿ, ಯುವ ಘಟಕದ ಅಧ್ಯಕ್ಷ ಅಭಿಷೇಕ್, ಪಕ್ಷದ ಮಾಯಕೊಂಡ ಕ್ಷೇತ್ರದ ಆಕಾಂಕ್ಷಿ ಸೋಮಶೇಖರ್, ಜಗಳೂರು ಕ್ಷೇತ್ರದ ಆಕಾಂಕ್ಷಿ ಮಂಜುನಾಥ ಗೌಡ, ಜಿಲ್ಲಾ ಕಾರ್ಯದರ್ಶಿ ವೀರಭದ್ರಪ್ಪ, ಮಾಲತೇಶ್, ಗುಡ್ಡಪ್ಪ, ಶ್ರೀಧರ್, ಅಜ್ಜೇಶ್
ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.