ADVERTISEMENT

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿ: ವಿ.ಎಸ್‌. ಉಗ್ರಪ್ಪ ಆಗ್ರಹ

ಮೀಸಲಾತಿ ಪ್ರಮಾಣ ಏರಿಕೆ ಸಂವಿಧಾನದ 9ನೇ ಪರಿಚ್ಛೇದ ಸೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 5:43 IST
Last Updated 22 ಡಿಸೆಂಬರ್ 2025, 5:43 IST
<div class="paragraphs"><p>ದಾವಣಗೆರೆಯಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಭಾನುವಾರ ಆಯೋಜಿಸಿದ್ದ ಸಭೆಯನ್ನು ಅಧ್ಯಕ್ಷ ವಿ.ಎಸ್. ಉಗ್ರಪ್ಪ ಉದ್ಘಾಟಿಸಿದರು </p></div>

ದಾವಣಗೆರೆಯಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಭಾನುವಾರ ಆಯೋಜಿಸಿದ್ದ ಸಭೆಯನ್ನು ಅಧ್ಯಕ್ಷ ವಿ.ಎಸ್. ಉಗ್ರಪ್ಪ ಉದ್ಘಾಟಿಸಿದರು

   

–ಪ್ರಜಾವಾಣಿ ಚಿತ್ರ

ದಾವಣಗೆರೆ: ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಏರಿಸಿರುವುದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ನಿಯೋಗವೊಂದನ್ನು ಪ್ರಧಾನಿ ಬಳಿಗೆ ಕರೆದೊಯ್ಯಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಆಗ್ರಹಿಸಿದರು.

ADVERTISEMENT

‘ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಬಿಜೆಪಿ ಅಧಿಕಾರವಧಿಯಲ್ಲಿ ಶೇ 56ಕ್ಕೆ ಏರಿಸಲಾಯಿತು. ಅನುಷ್ಠಾನಕ್ಕೆ ತರುವ ಇಚ್ಛಾಶಕ್ತಿ ಪ್ರದರ್ಶಿಸದ ಪರಿಣಾಮ ಈ ಸೌಲಭ್ಯ ಅನುಭವಿಸಲು ಸಾಧ್ಯವಾಗುತ್ತಿಲ್ಲ. ಇದು ಕಾರ್ಯರೂಪಕ್ಕೆ ಬರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮೀಸಲಾತಿ ಪ್ರಮಾಣ ಶೇ 50 ಮೀರಬಾರದು ಎಂಬ ನಿಯಮವಿತ್ತು. ಆದರೂ, ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಇದೇ ರೀತಿ ಆಯಾ ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಿಕೊಳ್ಳಲು ಸಂವಿಧಾನದಲ್ಲಿ ಅವಕಾಶ ಕಲ್ಪಿಸಬೇಕಿದೆ. ಈ ಕೋರಿಕೆಯನ್ನು ರಾಜ್ಯ ಸರ್ಕಾರವು ಕೇಂದ್ರದ ಮುಂದಿಡಬೇಕು. ಮೀಸಲು ಏರಿಕೆ ಕಾಯ್ದೆಯನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮನವಿ ಮಾಡಬೇಕು’ ಎಂದರು.

‘ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ವಾಲ್ಮೀಕಿ ನಾಯಕ ಸಮುದಾಯ ರಾಜ್ಯದಲ್ಲಿ ದೊಡ್ಡ ಹೋರಾಟ ನಡೆಸಿದೆ. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇ 27ಕ್ಕೆ ಏರಿಕೆ ಮಾಡಿದ್ದರು’ ಎಂದು ವಿವರಿಸಿದರು.

‘ಇದನ್ನು ಕೆಲವರು ಹೈಕೋರ್ಟ್‌ ಹಾಗೂ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ಪ್ರಶ್ನಿಸಿದ್ದಾರೆ. ಇದರಿಂದ ಈ ಸೌಲಭ್ಯ ಜನರಿಗೆ ತಲುಪಿಲ್ಲ. ಮೀಸಲಾತಿ ಜನರ ಹಕ್ಕೇ ಹೊರತು ಭಿಕ್ಷೆಯಲ್ಲ ಎಂಬುದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರ್ಥ ಮಾಡಿಕೊಳ್ಳಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಪಂಗಡಕ್ಕೆ ಕುರುಬರು ಸೇರಿದಂತೆ ಯಾವುದೇ ಸಮುದಾಯವನ್ನು ಸೇರ್ಪಡೆ ಮಾಡಲು ವಿರೋಧವಿಲ್ಲ. ಆದರೆ, ಆ ಸಮುದಾಯಗಳು ಬೇರೆ ಪ್ರವರ್ಗದಲ್ಲಿ ಪಡೆಯುತ್ತಿರುವ ಮೀಸಲಾತಿಯ ಪ್ರಮಾಣದೊಂದಿಗೆ ಪರಿಶಿಷ್ಟ ಪಂಗಡಕ್ಕೆ ಬರಲಿ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಹಾಗೂ ಬುಡಕಟ್ಟು ಹಿನ್ನೆಲೆ ಹೊಂದಿರುವ ಯಾವುದೇ ಸಮುದಾಯ ಪರಿಶಿಷ್ಟ ಪಂಗಡವನ್ನು ಸೇರಬಹುದು. ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ವಾಲ್ಮೀಕಿ ನಾಯಕ ಹಾಗೂ ಕುರುಬ ಸಮುದಾಯ ಒಟ್ಟಿಗೆ ಬೇಡಿಕೆ ಮುಂದಿಟ್ಟಿದ್ದವು. ವಾಲ್ಮೀಕಿ ಸಮುದಾಯ ಹೋರಾಟ ನಡೆಸಿದ ಪರಿಣಾಮವಾಗಿ ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿತು’ ಎಂದರು.

ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಕಾರ್ಯಾಧ್ಯಕ್ಷ ಎಂ. ನರಸಿಂಹಯ್ಯ, ಉಪಾಧ್ಯಕ್ಷ ಎಚ್.ಸಿ. ಹನುಮಂತಯ್ಯ, ಖಜಾಂಚಿ ಈ. ರಾಜಪ್ಪ, ಮುಖಂಡರಾದ ಶ್ರೀನಿವಾಸ ದಾಸಕರಿಯಪ್ಪ, ಬಿ.ವೀರಣ್ಣ, ಹುಚ್ಚವ್ವನಹಳ್ಳಿ ಮಂಜುನಾಥ್, ಗುಮ್ಮನೂರು ಮಲ್ಲಿಕಾರ್ಜುನ ಹಾಜರಿದ್ದರು.

ಸಮಾನ ಮನಸ್ಕರ ಸಭೆಯ ನಿರ್ಣಯಗಳು

* ಪರಿಶಿಷ್ಟ ಜಾತಿ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಲು ಸಂವಿಧಾನದತ್ತ ಅವಕಾಶ ಕಲ್ಪಿಸಬೇಕು.

* ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ (ಟಿಎಸ್‌ಪಿ) ಮೀಸಲಿಟ್ಟ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು.

* ಅನರ್ಹರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲು ಸೌಲಭ್ಯ ಕಬಳಿಸುತ್ತಿರುವುದಕ್ಕೆ ಕಡಿವಾಣ ಹಾಕಬೇಕು.

* ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಜೂನ್‌ ಅಥವಾ ಜುಲೈ ತಿಂಗಳ ಒಳಗೆ ಹಾಸ್ಟೆಲ್‌ ಪ್ರವೇಶ ಕಲ್ಪಿಸಬೇಕು. ಕಾಲಕಾಲಕ್ಕೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು.

* ಸಮುದಾಯದ ಉದ್ದಿಮೆದಾರರಿಗೆ ಕೈಗಾರಿಕೆ ಸ್ಥಾಪನೆಗೆ ಕನಿಷ್ಠ 10 ಎಕರೆ ಭೂಮಿ ಮತ್ತು ₹ 25 ಕೋಟಿ ವರೆಗೆ ಸಾಲ ಸೌಲಭ್ಯ ನೀಡಬೇಕು

* ಅನ್ನ ಶಿಕ್ಷಣ ಮತ್ತು ಧಾರ್ಮಿಕ ಕೈಂಕರ್ಯಗಳಿಗೆ ತ್ರಿವಿದ ದಾಸೋಹ ವ್ಯವಸ್ಥೆ ರೂಪಿಸಲು ಸಮುದಾಯದ ಪ್ರತಿಯೊಬ್ಬರು ಕೈಜೋಡಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.