ಭದ್ರಾ ಜಲಾಶಯದ ಬಲದಂಡೆ ನಾಲೆ: ರೇಣುಕಾಚಾರ್ಯ ನೇತೃತ್ವದ ನಿಯೋಗ ಸಿಎಂ ಭೇಟಿ
ದಾವಣಗೆರೆ: ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನಡೆಸಿರುವ ಕಾಮಗಾರಿಗೆ ಸಂಬಂಧಿಸಿದಂತೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇರುವ ಆಕ್ಷೇಪಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
‘ಜಿಲ್ಲಾ ರೈತ ಒಕ್ಕೂಟದ ನಿಯೋಗ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿತು. ಅಚ್ಚುಕಟ್ಟು ಪ್ರದೇಶದ ರೈತರ ಆಕ್ಷೇಪಗಳನ್ನು ಇಬ್ಬರೂ ಆಲಿಸಿದರು. ಪರಿಶೀಲಿಸಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಹಾಗೂ ಸ್ಥಳಕ್ಕೆ ಭೇಟಿ ನೀಡಿ ನಿರ್ಧರಿಸುವುದಾಗಿ ಡಿ.ಕೆ. ಶಿವಕುಮಾರ್ ಆಶ್ವಾಸನೆ ನೀಡಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಹೊಸದುರ್ಗ ತಾಲ್ಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಕುಡಿಯುವ ನೀರು ಪೂರೈಸಲು ಆಕ್ಷೇಪವಿಲ್ಲ. ಆದರೆ, ನಾಲೆ ಸೀಳಿ ನಡೆಸಿರುವ ಕಾಮಗಾರಿಯ ಬಗ್ಗೆ ತಕರಾರುಗಳಿವೆ. ಲಿಫ್ಟ್ ಅಥವಾ ಜಾಕ್ವೆಲ್ ಮೂಲಕ ನೀರು ಪೂರೈಕೆಗೆ ಅವಕಾಶಗಳಿದ್ದವು. ನಾಲೆ ಸೀಳಿರುವುದರಿಂದ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ರೈತರಿಗೆ ತೊಂದರೆ ಆಗಲಿದೆ ಎಂಬುದನ್ನು ವಿವರಿಸಿದ್ದೇವೆ’ ಎಂದರು.
ಮಾಜಿ ಶಾಸಕ ಬಸವರಾಜ ನಾಯ್ಕ, ಜಿಲ್ಲಾ ರೈತ ಒಕ್ಕೂಟದ ಕೊಳೇನಹಳ್ಳಿ ಬಿ.ಎಂ.ಸತೀಶ್, ಬಿಜೆಪಿ ಮುಖಂಡರಾದ ಚಂದ್ರಶೇಖರ್, ಲೋಕಿಕೆರೆ ನಾಗರಾಜ್, ಧನಂಜಯ್ ಕಡ್ಲೆಬಾಳ್ ಹಾಜರಿದ್ದರು.
‘ಹಿರಿಯರ ಮಾರ್ಗದರ್ಶನ ಪಾಲಿಸುವೆ’
‘ಪಕ್ಷದ ಮುಖಂಡರು ಸಲಹೆ, ಮಾರ್ಗದರ್ಶನಗಳನ್ನು ನೀಡಿದ್ದಾರೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲಿದ್ದು, ಕಾರ್ಯಕರ್ತರಿಗೆ ವಿಶ್ವಾಸ ಮೂಡುವಂತೆ ನಡೆದುಕೊಳ್ಳಲಿದ್ದೇನೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಭೆಯಲ್ಲಿ ಜಿಲ್ಲೆಯ ಕೆಲ ಮುಖಂಡರೊಂದಿಗೆ ಪಾಲ್ಗೊಂಡಿದ್ದೆ. ನಾಲ್ಕು ಗೋಡೆಗಳ ನಡುವೆ ಗಹನ ಚರ್ಚೆಗಳಾಗಿವೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಇಷ್ಟಪಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸೀಳಿರುವ ಭದ್ರಾ ನಾಲೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿರುವ ಭದ್ರಾ ಮುಖ್ಯ ಎಂಜಿನಿಯರ್ ಕಚೇರಿಗೆ ಜುಲೈ 9ರಂದು ಮುತ್ತಿಗೆ ಹಾಕಲಾಗುವುದು
ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.