ದಾವಣಗೆರೆ: ಕೇಂದ್ರ ಸರ್ಕಾರದ ಮೂರು ತಿದ್ದುಪಡಿ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಎಐಕೆಎಸ್ಸಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು ನಗರದ ರೈಲು ನಿಲ್ದಾಣದ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ ಕರಾಳ ಕಾನೂನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ 90 ದಿನಗಳಿಂದ ಹೋರಾಟದಲ್ಲಿ ನಿರತರಾಗಿರುವ ರೈತರ ಕರೆಯ ಮೇರೆಗೆ ರೈಲು ತಡೆ ನಡೆಸಲು ರೈತರು ಹೊರಟಿದ್ದರು. ಅವರನ್ನು ಪೋಲಿಸರು, ರೈಲ್ವೆ ಪೊಲೀಸರು ರೈಲು ನಿಲ್ದಾಣದ ಮುಂಭಾಗದಲ್ಲೇ ಬ್ಯಾರಿಕೇಡ್ ಹಾಕಿ ತಡೆದರು. ಪ್ರತಿಭಟನಕಾರರು ರೈಲು ನಿಲ್ದಾಣದ ಮುಂಭಾಗದಲ್ಲೇ ರಸ್ತೆತಡೆ ನಡೆಸಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು.
ಎಂಎಸ್ಪಿಗೆ ಕಾಯ್ದೆಯನ್ನು ಗಟ್ಟಿಯಾಗಿ ರೂಪಿಸಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ರೈತರ ಉತ್ಪನ್ನ ಖರೀದಿಸುವವರಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು ವ್ಯತ್ಯಾಸದ ಹಣವನ್ನು ಮರಳಿ ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ರೈತರಿಗೆ ವಿರುದ್ದವಾದ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು. ಮೊಂಡುತನ ಪ್ರದರ್ಶನ ಮಾಡಬಾರದು. ಕೃಷಿ ಕಾಯ್ದೆ ಹಿಂಪಡೆಯುವರೆಗೂ ಹೋರಾಟ ಮುಂದುವರಿಸಲಾಗುವುದು. ರೈತ ಪರ ಹೋರಾಟ ಮಾಡುವವರನ್ನು ದೇಶದ್ರೋಹಿಗಳೆಂದು ಕೇಸು ದಾಖಲು ಮಾಡಿಕೊಳ್ಳುತ್ತಿದೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ವಿವಿಧ ಸಂಘಟನೆಯ ಮುಖಂಡರಾದ ಎಚ್.ಜಿ. ಉಮೇಶ್, ಎಚ್.ಕೆ. ರಾಮಚಂದ್ರಪ್ಪ, ಹುಚ್ಚವ್ವನಹಳ್ಳಿ ಮಂಜುನಾಥ್, ಹೊನ್ನೂರು ಮುನಿಯಪ್ಪ, ತೇಜಸ್ವಿ ಪಟೇಲ್, ಪೂಜಾರ್ ಅಂಜಿನಪ್ಪ, ಜಯಪ್ಪ, ಹಾಲೇಶ್, ಶಿವರಾಜ್, ಭೀಮಾರೆಡ್ಡಿ, ಅವರಗೆರೆ ಚಂದ್ರು, ಐರಣಿ ಚಂದ್ರು, ಆವರಗೆರೆ ವಾಸು, ರಂಗನಾಥ್, ಹಾಲೂರು ಸಿದ್ದೇಶ್, ಕೈದಾಳೆ ಮಂಜುನಾಥ್, ತಿಪ್ಪೇಸ್ವಾಮಿ, ಸತೀಶ್ ಅರವಿಂದ್, ಸುನೀತ್ಕುಮಾರ್, ಚಂದ್ರಪ್ಪ, ಭಾರತಿ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.