ಚನ್ನಗಿರಿ: ‘ಪಟ್ಟಣದ ರಾಷ್ಟ್ರೀಯ ಹೆದ್ದಾರಿ 369ರಿಂದ 76 ಬೀರೂರು–ಸಮ್ಮಸಗಿ ರಾಜ್ಯ ಹೆದ್ದಾರಿಗೆ ಸೇರುವ ರಸ್ತೆ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಗೆ ₹ 2 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
ಪಟ್ಟಣದ ಜೀವ ವಿಮಾ ಕಚೇರಿಯ ಮುಂಭಾಗದಲ್ಲಿ ಮಂಗಳವಾರ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
0.00 ಕಿಮೀ ನಿಂದ 0.745 ಕಿಮೀ ವರೆಗೆ ಕಾಂಕ್ರೀಟ್ ರಸ್ತೆಯನ್ನುನಿರ್ಮಿಸಲಾಗುವುದು. ಹಳೆಯ ಪುರಸಭೆಯ ಕಾಂಕ್ರೀಟ್ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಲಾಗುವುದು. ಜೊತೆಗೆ ರಸ್ತೆಯ ಎರಡು ಬದಿಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಿ, ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗುವುದು. ಈಗಾಗಲೇ ಕಾಮಗಾರಿಯ ಟೆಂಡರ್ ಕಾರ್ಯ ಮುಕ್ತಾಯವಾಗಿದ್ದು, ಪ್ರಥಮ ದರ್ಜೆ ಗುತ್ತಿಗೆದಾರ ಶಶಿಧರ್ ನಾಯ್ಕ ಅವರಿಗೆ ಕಾಮಗಾರಿಯ ಗುತ್ತಿಗೆಯನ್ನು ನೀಡಲಾಗಿದೆ. ಒಳ ಚರಂಡಿ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸಿಮೆಂಟ್ ಪೈಪ್ಗಳನ್ನು ಅಳವಡಿಸಿದ ನಂತರ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್, ಗುತ್ತಿಗೆದಾರ ಶಶಿಧರ್ ನಾಯ್ಕ, ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ತಹಶೀಲ್ದಾರ್ ಎನ್.ಜೆ. ನಾಗರಾಜ್, ಅಶೋಕ್, ಜಯ್ಯಣ್ಣ, ಪಿ.ಬಿ. ನಾಯಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.