ದಾವಣಗೆರೆ: ಮೂರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಮಕ್ಕಳ ಸ್ನೇಹಿ ನ್ಯಾಯಾಲಯ) 20 ವರ್ಷ ಶಿಕ್ಷೆ ಹಾಗೂ ₹ 25,000 ದಂಡ ವಿಧಿಸಿದೆ.
ದಾವಣಗೆರೆ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಶಿವು ಅಲಿಯಾಸ್ ಶಿವಕುಮಾರ ಶಿಕ್ಷೆಗೊಳಗಾದ ಅಪರಾಧಿ. 2018ರಲ್ಲಿ ಈತ ಬಾಲಕಿಗೆ ತಿಂಡಿ ಕೊಡಿಸಿ ಪುಸಲಾಯಿಸಿ ತನ್ನ ಮನೆಯ ದನದ ಕೊಟ್ಟಿಗೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಅಳಲು ಆರಂಭಿಸಿದಾಗ ಆರೋಪಿ ಸಮಾಧಾನಪಡಿಸಿ ತನ್ನ ಮನೆಯ ಕ್ರಾಸ್ನ ಪಕ್ಕದಲ್ಲಿ ಬಿಟ್ಟು ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾನೆ.
ಈ ಕುರಿತು ಅಂದಿನ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಮಂಜುನಾಥ ಗಂಗಲ್ ತನಿಖೆ ಮಾಡಿ ಅಪರಾಧಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ಆಲಿಸಿದ ನ್ಯಾಯಾಧೀಶರಾದ ಶ್ರೀಪಾದ ಎನ್. ಅವರು ಶುಕ್ರವಾರ ತೀರ್ಪು ಪ್ರಕಟಿಸಿದರು. ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹ 6 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದರು.
ಸರ್ಕಾರಿ ಅಭಿಯೋಜಕ ಜಯಪ್ಪ ಕೆ.ಜಿ. ಸರ್ಕಾರದ ಪರ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.