
ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಗರದ ಎಂಸಿಸಿ ಬಡಾವಣೆಯ ಅವರ ನಿವಾಸದಿಂದ ಸೋಮವಾರ ಮಧ್ಯಾಹ್ನ 12.32ಕ್ಕೆ ಆರಂಭವಾಯಿತು.
ಪೂಜಾ ಕೈಂಕರ್ಯ ಮುಗಿದು ಪಾರ್ಥಿವ ಶರೀರವನ್ನು ಮನೆಯಿಂದ ಹೊರಗೆ ತರಲಾಯಿತು. ಈ ವೇಳೆ ಕುಟುಂಬದ ಸದಸ್ಯರ ಕಣ್ಣೀರು ಧಾರೆಯಾಗಿ ಹರಿಯಿತು. ಪುಷ್ಪಾಲಂಕೃತ ವಾಹನದಲ್ಲಿ ಪಾರ್ಥಿವ ಶರೀರವನ್ನು ಕೂರಿಸಲಾಯಿತು.
ಎಂಸಿಸಿ ಬಡಾವಣೆಯ ‘ಬಿ’ ಬ್ಲಾಕ್ನಿಂದ ಹೊರಟ ಮೆರವಣಿಗೆಯಲ್ಲಿ ಭಜನೆ ತಂಡಗಳು ಭಕ್ತಿ ಗೀತೆ ಹಾಡಿದವು. ಪಾರ್ಥಿವ ಶರೀರದ ಕೈವಲ್ಯಕ್ಕೆ ಪುತ್ರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೆಗಲು ಕೊಟ್ಟಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಸಾಲಾಗಿ ನಿಂತಿರುವ ಜನರು ಹೂಹಾರ ಹಾಕಿ ಗೌರವ ಸಲ್ಲಿಸಿದರು. ಶಾಮನೂರು ರಸ್ತೆ, ಗುಂಡಿ ವೃತ್ತ, ಚರ್ಚ್ ರಸ್ತೆ, ರಾಮ್ ಅಂಡ್ ಕೋ ವೃತ್ತ, ಎವಿಕೆ ಕಾಲೇಜು ರಸ್ತೆಯ ಮೂಲಕ ಸಾಗಿದ ಮೆರವಣಿಗೆ ಹೈಸ್ಕೂಲ್ ಮೈದಾನ ತಲುಪಿತು.
ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಂತಿಮ ದರ್ಶನ ಪಡೆದರು.
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಇಮ್ಮಡಿ ಕೇತೇಶ್ವರ ಸ್ವಾಮೀಜಿ ದರ್ಶನ ಪಡೆದರು. ಜ್ಯುವೇಲರಿ ಅಸೋಸಿಯೇಷನ್ ವತಿಯಿಂದ ಅಂಗಡಿಗಳನ್ನು ಮುಚ್ಚಿ ವಹಿವಾಟು ಸ್ಥಗಿತಗೊಳಿಸಿ ನಮನ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.