
ಹೊನ್ನಾಳಿ: ‘ಇಲ್ಲಿನ ಹಿರೇಕಲ್ಮಠದಲ್ಲಿ ಫೆ. 27ರಿಂದ ಮಾರ್ಚ್ 2ರವರೆಗೆ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮತ್ತು ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪುಣ್ಯಸ್ಮರಣೆ ಹಾಗೂ ರಾಜ್ಯಮಟ್ಟದ ಕೃಷಿಮೇಳ ಹಮ್ಮಿಕೊಳ್ಳಲಾಗಿದೆ’ ಎಂದು ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಗುರುವಾರ ಶಾಸಕ ಡಿ.ಜಿ. ಶಾಂತನಗೌಡ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರೊಂದಿಗೆ ಕಾರ್ಯಕ್ರಮ ನಡೆಯುವ ವೇದಿಕೆ ಹಾಗೂ ಬೃಹತ್ ಪೆಂಡಾಲ್ ಮತ್ತು ಸ್ಟಾಲ್ಗಳನ್ನು ವೀಕ್ಷಿಸಿ ಮಾತನಾಡಿದರು.
‘ಫೆ. 27ರಂದು ಬೆಳಿಗ್ಗೆ 7ಗಂಟೆಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದೆ. 10 ಗಂಟೆಗೆ ಕಾಶಿಯ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿ ಪುರಪ್ರವೇಶ ಮಾಡುವರು. ಅವರನ್ನು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವದೊಂದಿಗೆ ಕೃಷಿಮೇಳದ ವೇದಿಕೆಗೆ ಕರೆತರಲಾಗುವುದು’ ಎಂದು ತಿಳಿಸಿದರು.
‘ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಧರ್ಮಸಭೆ ಉದ್ಘಾಟಿಸಲಿದ್ದಾರೆ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಡಿ.ಜಿ.ಶಾಂತನಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿರುವರು. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರ ನಗೆಹಬ್ಬ ನಡೆಯಲಿದೆ’ ಎಂದರು.
‘ಫೆ. 28ರಂದು ನಡೆಯುವ ಧರ್ಮಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಪಶುಪತಿ ಶಿವಾನಂದ ಶಿವಾಚಾರ್ಯ ದಿಂಡದಹಳ್ಳಿ, ಆವರಗೊಳ್ಳ ಮಠದ ಓಂಕಾರ ಶಿವಾಚಾರ್ಯರು, ಬಿಳಿಕಿ ಮಠದ ರಾಚೋಟೇಶ್ವರ ಶಿವಾಚಾರ್ಯರು, ಗಂಜಿಗಟ್ಟೆ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಗಡಿ ತಾಲ್ಲೂಕಿನ ಮಕ್ಕಳ ದೇವರ ಮಠದ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಜೆ ಸಾಂಸ್ಕೃತಿಕ ಕಾಯಕ್ರಮಗಳು ನಡೆಯಲಿವೆ’ ಎಂದು ತಿಳಿಸಿದರು.
‘ರೈತರ ಬದುಕು ಹಸನಾಗಲೆಂದು ಶ್ರೀ ಮಠದಿಂದ ಕೃಷಿಮೇಳದ ಜೊತೆಗೆ ಕೃಷಿಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ವಿವಿಧ ಇಲಾಖೆಗಳ ಹಾಗೂ ಕಂಪನಿಗಳ ಉತ್ಪನ್ನಗಳ ಪ್ರಚಾರಕ್ಕಾಗಿ ಅಂದಾಜು 1,500ಕ್ಕೂ ಹೆಚ್ಚು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
‘ಕೃಷಿ ಕ್ಷೇತ್ರದಲ್ಲಿನ ಹೊಸ ಹೊಸ ಆವಿಷ್ಕಾರಗಳು ಹಾಗೂ ವೈಜ್ಞಾನಿಕ ಕೃಷಿ ಪರಿಕರಗಳನ್ನು ಪರಿಚಯಿಸುವ ಉದ್ದೇಶವನ್ನು ಮೇಳ ಹೊಂದಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಮುಖಂಡರಾದ ಎಚ್.ಎ. ಗದ್ದಿಗೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡರಾದ ಎಚ್.ಎ.ಉಮಾಪತಿ, ರೈತ ಮುಖಂಡರಾದ ಕೆ.ಸಿ.ಬಸಪ್ಪ, ದೊಡ್ಡೇರಿ ಬಸವರಾಜಪ್ಪ, ಹಿರೇಮಠದ ಬಸವರಾಜಪ್ಪ, ಮಾಜಿ ಸೈನಿಕ ಎಂ. ವಾಸಪ್ಪ, ನೆಲಹೊನ್ನೆ ಮಂಜುನಾಥ್, ಮಾರುತಿ ನಾಯ್ಕ, ಸುರೇಂದ್ರ ನಾಯ್ಕ, ನವೀನ್ ಇಂಚರ, ರಾಕೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.