ADVERTISEMENT

ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಬೆಂಬಲ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 6:31 IST
Last Updated 13 ಡಿಸೆಂಬರ್ 2020, 6:31 IST
ದಾವಣಗೆರೆಯಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ರೈತ ಸಂಘದ ಪದಾಧಿಕಾರಿಗಳು ಬೆಂಬಲ ಸೂಚಿಸಿದರು
ದಾವಣಗೆರೆಯಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ರೈತ ಸಂಘದ ಪದಾಧಿಕಾರಿಗಳು ಬೆಂಬಲ ಸೂಚಿಸಿದರು   

ದಾವಣಗೆರೆ: ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎನ್ನುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಸಾರಿಗೆ ನೌಕರರ ಮುಷ್ಕರ ಎರಡನೇ ಕಾಲಿಟ್ಟಿತು.

ಶನಿವಾರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲವು ಪ್ರಯಾಣಿಕರು ಬಿಟ್ಟರೆ ಸಾರಿಗೆ ಇಲಾಖೆಯ ನೌಕರರು ಅತ್ತ ಸುಳಿಯಲಿಲ್ಲ. ಈ ಕಾರಣದಿಂದ ಬಸ್ ನಿಲ್ದಾಣದಲ್ಲಿ ಯಾವ ಬಸ್‌ಗಳು ಡಿಪೊ ಬಿಟ್ಟು ಹೊರಬಂದಿಲ್ಲ. ಈ ನಡುವೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಕರ್ತವ್ಯಕ್ಕೆ ಬಾರದವರಿಗೆ ಹಾಜರಿ
ನೀಡಿಲ್ಲ.

ಕೆಎಸ್‌ಆರ್‌ಟಿಸಿ ಬಸ್‌ಗಳು ಬಾರದ ಕಾರಣ ಜಿಲ್ಲಾ ಕೇಂದ್ರಗಳಿಂದ ಗ್ರಾಮೀಣ ಭಾಗಕ್ಕೆ ಹೊರಡುವ ಜನರಿಗೆ ಸಾಕಷ್ಟು ತೊಂದರೆಯಾಗಿತ್ತು. ಎರಡನೇ ಶನಿವಾರ ಸರ್ಕಾರಿ ರಜೆ ಇದ್ದರೂ, ನಾನಾ ಕೆಲಸಗಳಿಗೆ ಜಿಲ್ಲೆಗೆ ಬಂದ ಹಳ್ಳಿಗರು ತೀವ್ರ ತೊಂದರೆ ಅನುಭವಿಸಬೇಕಾಯಿತು. ನಗರದ ಕೆಲವೆಡೆ ಮುಷ್ಕರನಿರತ ನೌಕರರನ್ನು ಮನವೊಲಿಸಿ ಬಸ್‌ಗಳ ಸಂಚಾರ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗಿದ್ದರು. ಮಧ್ಯಾಹ್ನ ರೈತ ಸಂಘದವರು ಸಾರಿಗೆ ನೌಕರರಿಗೆ ಬೆಂಬಲ ಸೂಚಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.

ADVERTISEMENT

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಬಲ ಸೂಚಿಸಿದರು. ಕಾಂಗ್ರೆಸ್ ಮುಖಂಡರಾದ ಡಿ. ಬಸವರಾಜ್, ಸೀಮೆಎಣ್ಣಿ ಮಲ್ಲೇಶ್, ಎ. ನಾಗರಾಜ್, ಗಡಿಗುಡಾಳ್ ಮಂಜುನಾಥ್, ಕೆ. ಚಮನ್‍ಸಾಬ್, ಮತ್ತು ಕೆ.ಜಿ. ಶಿವಕುಮಾರ್, ಕನ್ನಡ ಪರ ಸಂಘಟನೆಗಳ ಒಕ್ಕೂಟದ ನಾಯಕರಾದ ಟಿ. ಶಿವಕುಮಾರ್, ಎಸ್.ಟಿ. ಸೋಮಶೇಖರ್ ಮತ್ತು ರೈತ ಸಂಘದ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸಪ್ಪ ಇತರರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.