ADVERTISEMENT

ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿ: ಬೈರತಿ ಬಸವರಾಜ ಸಲಹೆ

ಕಾರ್ಯಕರ್ತರಿಗೆ ನೂತನ ಸಚಿವ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 0:59 IST
Last Updated 7 ಆಗಸ್ಟ್ 2021, 0:59 IST
ದಾವಣಗೆರೆಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನೂತನ ಸಚಿವ ಬೈರತಿ ಬಸವರಾಜ ಅವರನ್ನು ಶಾಸಕರಾದ ಪ್ರೊ.ಲಿಂಗಣ್ಣ, ಎಸ್.ಎ. ರವೀಂದ್ರನಾಥ್ ಸನ್ಮಾನಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಹನಗವಾಡಿ, ಮೇಯರ್ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಮಾಜಿ ಮುಖ್ಯ ಸಚೇತಕ ಎ.ಎಚ್‌. ಶಿವಯೋಗಿಸ್ವಾಮಿ ಇದ್ದರು.
ದಾವಣಗೆರೆಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನೂತನ ಸಚಿವ ಬೈರತಿ ಬಸವರಾಜ ಅವರನ್ನು ಶಾಸಕರಾದ ಪ್ರೊ.ಲಿಂಗಣ್ಣ, ಎಸ್.ಎ. ರವೀಂದ್ರನಾಥ್ ಸನ್ಮಾನಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಹನಗವಾಡಿ, ಮೇಯರ್ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಮಾಜಿ ಮುಖ್ಯ ಸಚೇತಕ ಎ.ಎಚ್‌. ಶಿವಯೋಗಿಸ್ವಾಮಿ ಇದ್ದರು.   

ದಾವಣಗೆರೆ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಳೆದುಕೊಂಡಿರುವ ಕ್ಷೇತ್ರಗಳನ್ನು ಮತ್ತೆ ಪಡೆಯಲು ಎಲ್ಲರೂ ಶ್ರಮಿಸಬೇಕು. ಇದಕ್ಕೆ ಎಲ್ಲ ಸಹಕಾರ ನೀಡಲು ಬದ್ಧ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡುತ್ತೇನೆ’ ಎಂದು ನೂತನ ಸಚಿವ ಬೈರತಿ ಬಸವರಾಜ ಹೇಳಿದರು.

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕಾರಣ ಇಲ್ಲಿನ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿ, ವಿಶೇಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

‘ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಈಗಿನಿಂದಲೇ ಸಂಕಲ್ಪ ಮಾಡಬೇಕು. ಪಕ್ಷದ ಸಂಘಟನೆಗೆ ಯಾವುದೇ ಕುಗ್ರಾಮಕ್ಕೆ ಕರೆದರೂ ಬರುತ್ತೇನೆ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ನೂತನ ಬಿಜೆಪಿ ಜಿಲ್ಲಾ ಕಚೇರಿ ನಿರ್ಮಿಸುವ ಸಂಬಂಧ ಈಗಾಗಲೇ ನಿವೇಶನ ಖರೀದಿಸಿದ್ದು, ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು. ಕಚೇರಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದು ಭರವಸೆ ನೀಡಿದರು.

ದಾವಣಗೆರೆ ಉತ್ತರ ಶಾಸಕ ಎಸ್‌.ಎ. ರವೀಂದ್ರನಾಥ್‌, ‘ಬೈರತಿ ಬಸವರಾಜ ಅವರ ಶಿಸ್ತನ್ನು ಎಲ್ಲರೂ ಕಲಿಯಬೇಕು. ಯಾವುದೇ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸುತ್ತಾರೆ. ಕಡತಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತಾರೆ. ನಗರಾಭಿವೃದ್ಧಿ ಸಚಿವರಾಗಿದ್ದಾಗ ಉತ್ತಮ ಕೆಲಸ ಮಾಡಿದ್ದರು. ಅವರಿಗೆ ಅದೇ ಖಾತೆ ಸಿಗಲಿ. ಮುಂದೆ ಇನ್ನಷ್ಟು ಹೆಸರು ಬರಲಿ’ ಎಂದು ಆಶಿಸಿದರು.

ಮಾಯಕೊಂಡ ಶಾಸಕ ಪ್ರೊ.ಎನ್‌. ಲಿಂಗಣ್ಣ, ‘ಬಿಜೆಪಿ ಜಿಲ್ಲೆಯಲ್ಲಿ ಉತ್ತಮವಾಗಿ ಬೆಳೆದಿದೆ. ಇನ್ನೂ ಹೆಚ್ಚಿನ ಸಂಘಟನೆ ಅಗತ್ಯ ಇದೆ. ಮುಂಬರುವಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್‌ ಹನಗವಾಡಿ, ‘ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಲು ಕಾರ್ಯಕರ್ತರು ಮುಂದಾಗಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.‌ ಜಗದೀಶ್‌ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿಜೆಪಿ ರಾಜ್ಯ ಪ್ರಕೋಷ್ಠ ಸಹ ಸಂಚಾಲಕ ಡಾ.ಎ.ಎಚ್.‌ ಶಿವಯೋಗಿಸ್ವಾಮಿ, ರಾಜ್ಯ ಕಾರ್ಯದರ್ಶಿ ಸುಧಾ ಜಯರುದ್ರೇಶ್‌, ಮೇಯರ್‌ಎಸ್.‌ಟಿ. ವೀರೇಶ್‌, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಮುಖಂಡರಾದಶ್ರೀನಿವಾಸ್‌ ದಾಸಕರಿಯಪ್ಪ, ಶಿವರಾಜ್‌ ಪಾಟೀಲ್‌, ಮಂಡಲ, ಮೋರ್ಚಾ ಅಧ್ಯಕ್ಷರು, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.