
ದಾವಣಗೆರೆ: ‘ಇಂದಿನ ದಿನಗಳಲ್ಲಿ ಮಕ್ಕಳನ್ನು ರಕ್ಷಣೆ ಮಾಡುವುದು ಅತಿ ಅನಿವಾರ್ಯವಾಗಿದೆ. ಮಹಿಳೆಯರು ಎಷ್ಟೇ ಕೆಲಸದ ಒತ್ತಡದಲ್ಲಿದ್ದರೂ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಜೊತೆಗೆ ಜವಾಬ್ದಾರಿಗಳನ್ನು ಕಲಿಸಬೇಕಾಗಿದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್. ಹೇಳಿದರು.
ತಾಲ್ಲೂಕಿನ ಅಣಜಿ ಗ್ರಾಮದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಗ್ರಾಮಾಂತರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಲ್ಲದ ಪೋಷಕರು ಕಾನೂನು ಪ್ರಕಾರ ಮಕ್ಕಳನ್ನು ದತ್ತು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯೆ ಅನಿತಾ, ‘ಇಂದಿನ ದಿನಗಳಲ್ಲಿ ಮಹಿಳೆಯರು ಕಾನೂನು ವಿಚಾರಗಳನ್ನು ತಿಳಿದುಕೊಳ್ಳುವುದು ಅನಿವಾರ್ಯ’ ಎಂದು ಹೇಳಿದ ಅವರು, ಮಹಿಳೆಯರಿಗೆ ಇರುವ ಉಚಿತ ಕಾನೂನು– ನೆರವುಗಳ ಕುರಿತು ಮಾಹಿತಿ ನೀಡಿದರು.
ದಾವಣಗೆರೆ ಜಿಲ್ಲೆಯ ಬಿ.ಸಿ. ಟ್ರಸ್ಟ್ ನಿರ್ದೇಶಕ ಲಕ್ಷ್ಮಣ್ ಎಂ, ‘ದಿಶಾ’ ಸಮಿತಿ ಸದಸ್ಯ ಎಸ್.ಕೆ. ಚಂದ್ರಶೇಖರ್, ಉಪನ್ಯಾಸಕಿ ಅಶ್ವಿನಿ ನಾಯ್ಕ ಎಂ., ಅಣಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಮಂಜುನಾಥ್, ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಅಧ್ಯಕ್ಷ ಬಿ. ಬಸಲಿಂಗಪ್ಪ, ತಾಲ್ಲೂಕು ಯೋಜನಾಧಿಕಾರಿ ಸತೀಶ್ ಡಿ.ಬಿ, ರಾಜಣ್ಣ, ರೇವಣಸಿದ್ದಪ್ಪ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರತಿಭಾ, ಮೇಲ್ವಿಚಾರಕಿ ಅಕ್ಷತಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ, ಕರಕುಶಲ ವಸ್ತುಗಳ ಪ್ರದರ್ಶನ, ಸ್ವ–ಉದ್ಯೋಗ ಮಳಿಗೆಗಳು ಎಲ್ಲರ ಗಮನ ಸೆಳೆದವು. ಕೇಂದ್ರದ ಎಲ್ಲ ಸದಸ್ಯರು ಕಲಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.